ಬೆಂಗಳೂರು : 'ಜೆಡಿಎಸ್' ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಪಕ್ಷವನ್ನು ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಈ ಬಗ್ಗೆ ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿರುವ ಅಬ್ದುಲ್ ಅಜೀಂ, ನ.5ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಡಿ.ವಿ.ಸದಾನಂದ ಗೌಡರ ವಿರುದ್ಧ ಸ್ಪರ್ಧಿಸಿದ್ದ ಅಬ್ದುಲ್ ಅಜೀಂ ಸೋಲು ಅನುಭವಿಸಿದ್ದರು. ನಂತರ ಹಲವಾರು ಬಾರಿ ಜೆಡಿಎಸ್ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಜೆಡಿಎಸ್ ನಲ್ಲಿ ನಡೆದ ಇತ್ತೀಚಿನ ಬೆಳವಣಿಗೆಯಿಂದ ಅಸಮಾಧಾನಗೊಂಡಿರುವ ಅಜೀಂ, ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.
ಬಿಜೆಪಿ ಸೇರ್ಪಡೆ ಕುರಿತು ಪಕ್ಷದ ನಾಯಕರೊಂದಿಗೆ ಮಾತುಕರೆ ನಡೆಸಿದ್ದೇನೆ. ನಾನು ಬಿಜೆಪಿ ಸೇರುವುದಕ್ಕೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜ್ಯದ ಕೋರ್ ಕಮಿಟಿ ನಾಯಕರು ಒಪ್ಪಿಗೆ ನೀಡಿದ್ದಾರೆ ಎಂದು ಅಜೀಂ ಹೇಳಿದ್ದಾರೆ.
ಹಲವಾರು ಬಾರಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದ ಅಬ್ದುಲ್ ಅಜೀಂ ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಜೆಡಿಎಸ್ ನಾಯಕರ ನಿರ್ಧಾರದ ಕುರಿತು ಹಲವು ಬಾರಿ ಅವರು ದೇವೇಗೌಡರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು.