ಬೆಂಗಳೂರು : ಪ್ರಸಕ್ತ ಆರ್ಥಿಕ ವರ್ಷದಲ್ಲಿ 14,400 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ನಿರೀಕ್ಷಿತ ಗುರಿ ತಲುಪಲಾಗುವುದು ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳೆದ ವರ್ಷ 12,600 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹಿಸಲಾಗಿತ್ತು ಎಂದು ಹೇಳಿದರು. ನಿರೀಕ್ಷಿತ ಪ್ರಮಾಣದಲ್ಲಿ ಆದಾಯ ಸಂಗ್ರಹವಾಗುತ್ತಿರುವುದರಿಂದ ಇಲಾಖೆಯಲ್ಲಿ ಸೋರಿಕೆ ಪ್ರಮಾಣ ಉದ್ಭವಿಸುವುದಿಲ್ಲ ಎಂದರು.
ರಾಜ್ಯದಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಶೇ. 5.5 ರಷ್ಟು ವ್ಯಾಟ್ ವಿಧಿಸಲಾಗಿದ್ದು, ಅದನ್ನು ಹಿಂಪಡೆಯುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಮದ್ಯದಂಗಡಿಗಳಿಗೆ ಪರವಾನಗಿ ಸೇರಿದಂತೆ ಇಲಾಖೆಯ ಹಲವು ಆಡಳಿತಾತ್ಮಕ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಮಟ್ಟದಲ್ಲಿಯೇ ನಡೆಯುತ್ತಿವೆ. ಇದರ ಬದಲಾಗಿ, ಅಬಕಾರಿ ಇಲಾಖೆಯ ಜಂಟಿ ಆಯುಕ್ತರಿಂದ ನಡೆಸುವಂತೆಯೂ ಚಿಂತನೆ ನಡೆಸಲಾಗುತ್ತಿದ್ದು, ಕಾನೂನಿನಗೆ ತಿದ್ದುಪಡಿ ತರುವ ಬಗ್ಗೆಯೂ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.
ರಾಜ್ಯ ಶೇ.95 ರಷ್ಟು ಕಳ್ಳಭಟ್ಟಿ ಮುಕ್ತ ರಾಜ್ಯವಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಕಳ್ಳಭಟ್ಟಿ ವ್ಯವಹಾರಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ಸದ್ಯದಲ್ಲೇ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು. ಅಬಕಾರಿ ಇಲಾಖೆಯಲ್ಲಿ ಸುಮಾರು ಎರಡು ಸಾವಿರ ವಿವಿಧ ಶ್ರೇಣಿಗಳ ಹುದ್ದೆಗಳು ಖಾಲಿ ಇದ್ದು, 1500 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಈಗಾಗಲೇ ಅನುಮತಿ ನೀಡಿದೆ. 1353 ಅಬಕಾರಿ ರಕ್ಷಕರು, 440 ಉಪ ನಿರೀಕ್ಷಕರು ಹಾಗೂ 250ಕ್ಕೂ ಹೆಚ್ಚು ವಾಹನ ಚಾಲಕ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮದ್ಯದಂಗಡಿಗಳಿಗೆ ಪರವಾನಗಿ ನೀಡುವಾಗ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಕುರಿತೂ ಸಹ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಬೆಳಗಾವಿಯಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದ ದಿನಾಂಕರ ನಿಗದಿಯಾದ ತಕ್ಷಣ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದರು.