ನವದೆಹಲಿ : ಅಂತರ್ಜಾಲದಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ಜಿಹಾದಿ ಚಟುವಟಿಕೆಗಳ ಮೇಲೆ ಕಣ್ಣಿಡಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂಟರ್ ಪೋಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನ.6ರಂದು ಇಂಟರ್ ಪೋಲ್ ಜನರಲ್ ಅಸೆಂಬ್ಲಿಯ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಜನಾಥ್ ಸಿಂಗ್, ಸಾಮಾಜಿಕ ಜಾಲತಾಣಗಳಲ್ಲಿ ಅನಾಮಿಕತೆಯ ಸೌಲಭ್ಯ ಉಗ್ರರಿಗೆ ವರದಾನವಾಗಿದ್ದು, ಕಾನೂನು ತಮ್ಮನ್ನು ಹಿಂಬಾಲಿಸುವ ಭಯವಿಲ್ಲದೇ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ.
ಸೈಬರ್ ಮೂಲಕ ಮಹಿಳೇಯರು ಹಾಗೂ ಮಕ್ಕಳನ್ನು ಉಗ್ರರು ಟಾರ್ಗೆಟ್ ಮಾಡುತ್ತಿದ್ದಾರೆ, ಅಲ್ಲದೇ ದೇಶಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಕಳವು ಮಾಡಲಾಗುತ್ತಿದೆ. ಪ್ರಸಕ್ತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ಜಿಹಾದ್ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಮೂಲಕ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸುವವರ ಮೇಲೆ ಹದ್ದಿನ ಕಣ್ಣಿಡಲು ಇಂಟರ್ ಪೋಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.