ಬೆಂಗಳೂರು : ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕುರಿತಂತೆ ರಾಜ್ಯ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ವರದಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಶಿಫಾರಸ್ಸುಗಳನ್ನು ಜಾರಿಗೆ ತರುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕುರಿತಂತೆ ಸರ್ಕಾರ ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿಯು ರಾಜ್ಯದ ಅನೇಕ ಭಾಗಗಳಿಗೆ ಭೇಟಿ ನೀಡಿ, ಜನಪ್ರತಿನಿಧಿಗಳು, ರಾಜಕೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸಿ, ಒಮ್ಮತದ ವರದಿ ಸಲ್ಲಿಸಿದೆ ಎಂದು ತಿಳಿಸಿದರು.
ಪಂಚಾಯತ್ ವ್ಯವಸ್ಥೆ ಇನ್ನೂ ಬಲಗೊಳ್ಳಬೇಕಾದರೆ ಜನರ ಸಹಭಾಗಿತ್ವ ಇನ್ನೂ ಹೆಚ್ಚಾಗಬೇಕು. ಈ ಹಿನ್ನೆಲೆಯಲ್ಲಿ ಕಾಯಿದೆಗೆ ಯಾವ ರೀತಿಯ ತಿದ್ದುಪಡಿಗಳು ಅಗತ್ಯ ಎಂಬುದನ್ನು ತಿಳಿಯಲು ಸಮಿತಿ ರಚಿಲಾಗಿತ್ತು ಸಮಿತಿ ಸಲ್ಲಿಸಿರುವ ವರದಿ ಮತ್ತು ಅದರಲ್ಲಿನ ಶಿಫಾರಸ್ಸುಗಳ ಬಗ್ಗೆ ಚರ್ಚಿಸಿ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ತೀಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ವಿವರಿಸಿದರು.