ನವದೆಹಲಿ/ಮುಂಬೈ : ಕೇಂದ್ರ ಸಚಿವ ಸಂಪುಟದಲ್ಲಿ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದೆ.
ಶಿವಸೇನೆ ಸಂಸದ ಅನಿಲ್ ದೇಸಾಯಿಯವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ಉದ್ಧವ್ ಠಾಕ್ರೆ ಒತ್ತಾಯಿಸಿದ್ದರು. ಆದರೆ ಅನಿಲ್ ದೇಸಾಯಿಗೆ ರಾಜ್ಯ ದರ್ಜೆ ಸಚಿವ ಸ್ಥಾನ ನೀಡಲು ಬಿಜೆಪಿ ನಾಯಕರು ನಿರ್ಧರಿಸಿದ್ದರು. ಅಲ್ಲದೇ ಶಿವಸೇನೆ ಮುಖಂಡ ಸುರೇಶ್ ಪ್ರಭು ಅವರಿಗೆ ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಶಿವಸೇನೆ ಕೊನೆ ಕ್ಷಣದಲ್ಲಿ ಪ್ರಮಾಣ ವಚನ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಬಹಿಷ್ಕರಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿವಸೇನೆ, ಸುರೇಶ್ ಪ್ರಭು ಆಯ್ಕೆ ಶಿವಸೇನೆ ಆಯ್ಕೆಯಾಗಿರಲಿಲ್ಲ, ಪಕ್ಷ ಅನಿಲ್ ದೇಸಾಯಿ ಅವರನ್ನು ಸೂಚಿಸಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಖಾತೆ ಹಂಚಿಕೆಯಲ್ಲಿ ನಿರೀಕ್ಷೆಯಿತ್ತು, ಆದರೆ ಅನಿಲ್ ದೇಸಾಯಿಯವರಿಗೆ ರಾಜ್ಯ ದರ್ಜೆ ಸಚಿವ ಸ್ಥಾನ ನೀಡಿರುವುದು ಅಸಮಾಧಾನ ಉಂಟುಮಾಡಿದೆಯೆಂದು ಪ್ರಧಾನಿ ನರೇಂದ್ರ ಮೋದಿಯವರ ನಡೆಗೆ ಆಕ್ರೋಶ ವ್ಯಕ್ತಪಡಿಸಿದೆ.
ಇನ್ನು ಶಿವಸೇನೆ ಮುಖಂಡ ಸುರೇಶ್ ಪ್ರಭು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಶಿವಸೇನೆಗೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ನಡುವೆ ಮಹಾರಾಷ್ಟ್ರದಲ್ಲಿ ಅಲ್ಪಮತದ ಸರ್ಕಾರ ರಚನೆ ಮಾಡಿರುವ ಬಿಜೆಪಿಗೆ ಬೆಂಬಲ ನೀಡಬೇಕೆ ಅಥವಾ ಬೇಡವೇ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳುವ ಕುರಿತು ಮುಂಬೈನಲ್ಲಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನೆ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ.