ಬೆಂಗಳೂರು : ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದರು. ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್,ಕಾನೂನು ಸಚಿವ ಟಿ.ಬಿ.ಜಯಚಂದ್ರ ಹಾಗೂ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಕೃಷ್ಣಾ ನ್ಯಾಯಾಧಿಕರಣದ ಪ್ರಕಾರ ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ 32 ಟಿಎಂಸಿ ನೀರು ಹರಿಸಬೇಕು. ಈ ನಿಟ್ಟಿನಲ್ಲಿ ಕರ್ನಾಟಕದಿಂದ ಈಗಾಗಲೇ 24 ಟಿಎಂಸಿ ನೀರು ಹರಿಸಲಾಗಿದ್ದು, ಬಾಕಿ 8 ಟಿಎಂಸಿ ನೀರು ಹರಿಸಬೇಕಿದೆ. ಆದರೆ ನೀರು ಹರಿಸುವ ನಾಲೆಗಳಲ್ಲಿ ಹೂಳು ತುಂಬಿದ್ದರಿಂದ ನಾಲೆಗಳು ಸಮರ್ಥವಾಗಿಲ್ಲ ಹೀಗಾಗಿ ಹೂಳೆತ್ತುವ ಕಾರ್ಯ ಮೊದಲು ನಡೆಯಬೇಕಿದೆ. ಇಲ್ಲವಾದಲ್ಲಿ ನೀರು ವ್ಯರ್ಥವಾಗಲಿದೆ. ನಾಲೆಗಳ ಹೂಳೆತ್ತುವ ಕಾರ್ಯಕ್ಕೆ 1500 ಕೋಟಿ ರೂ ವೆಚ್ಚವಾಗಲಿದ್ದು, ಕೆಂದ್ರ ಸರ್ಕಾರ, ಕರ್ನಾಟ ಸರ್ಕಾರ ಹಾಗೂ ಆಂಧ್ರಪ್ರದೇಶ ಸರ್ಕಾರಗಳು ಪರಸ್ಪರ ಸಹಕಾರದಿಂದ ಹೂಳೆತ್ತುವ ಕಾರ್ಯ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು.
ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತುಂಗಭದ್ರಾ ಕಾಲುವೆ ವಿಸ್ತರಣೆ, ನಾಲೆಗಳ ಆಧುನೀಕರಣ ಕುರಿತು ಚರ್ಚೆ ನಡೆಸಲಾಗಿದೆ. ನೀರು ಬಿಡುವ ನಾಲೆಗಳ ಆಧುನೀಕರಣ ಮೊದಲು ಮಾಡುವ ಅಗತ್ಯವಿದೆ ಎಂದು ತಿಳಿಸಿದರು.
ನಾಲೆಗಳಲ್ಲಿ ಹೂಳು ತುಂಬಿರುವುದರಿಂದ, ಕರ್ನಾಟಕದಿಂದ ಬಿಡುವ ನೀರು ವ್ಯರ್ಥವಾಗುತ್ತಿದೆ. ಹೀಗಾಗಿ ಮೊದಲು ಹೂಳೆತ್ತುವ ಕಾರ್ಯವಾಗಬೇಕು. ಬಳಿಕ ನೀರು ಹಂಚಿಕೆ ವಿಚಾರದ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಮಾತನಾದಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾಲೆಗಳ ಆಧುನೀಕರಣದ ಬಗ್ಗೆ ಕರ್ನಾಟಕ ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿದ್ದೇವೆ. ಇದು ಬಹಳ ವರ್ಷಗಳ ಬೇಡಿಕೆಯಾಗಿದ್ದು, ನಾಲೆಗಳ ಆಧುನೀಕರಣದ ಅಗತ್ಯವನ್ನು ಉಭಯ ರಾಜ್ಯಗಳು ಮನಗೊಂಡಿವೆ ಎಂದು ತಿಳಿಸಿದರು.