ನವದೆಹಲಿ : ಬಹುಕೋಟಿ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿ ಡಿಎಂಕೆ ಸಂಸದೆ ಕನ್ನಿಮೋಳಿಯವರಿಗೆ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ಬಂಧನ ವಾರಂಟ್ ರದ್ದುಗೊಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಿಮೋಳಿ ನ.10ರಂದು ದೆಹಲಿಯ ಪಟಿಯಾಲಾ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕನ್ನಿಮೋಳಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ನ್ಯಾಯಾಲಯ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನಲೆಯಲ್ಲಿ ದೆಹಲಿ ನ್ಯಾಯಾಲಯ ಕನ್ನಿಮೋಳಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿತ್ತು.
ಈ ನಿಟ್ಟಿನಲ್ಲಿ ಕನ್ನಿಮೋಳಿಯವರನ್ನು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆಯಿತ್ತು. ಬಂಧನ ಭೀತಿ ಎದುರಾಗುತ್ತಿದ್ದಂತೆಯೇ ಕನ್ನಿಮೋಳಿ ಪಟಿಯಾಲಾ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ಈ ಹಿನ್ನಲೆಯಲ್ಲಿ ನ್ಯಾಯಾಧೀಶರು ಕನ್ನಿಮೋಳಿ ವಿರುದ್ಧದ ಬಂಧನ ವಾರಂಟ್ ರದ್ದುಗೊಳಿಸಿದ್ದಾರೆ.
2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿದ್ದ ಕನ್ನಿಮೋಳಿ ಕಳೆದ ಆಗಸ್ಟ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ನಿಂದ ಜಾಮೀನು ಪಡೆದು ಹೊರಬಂದಿದ್ದರು.