ಮುಂಬೈ : 'ಮಹಾರಾಷ್ಟ್ರ' ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿರುವ ಎನ್.ಸಿ.ಪಿ ಮುಖಂಡ ಶರದ್ ಪವಾರ್, ವಿಧಾನಸಭೆಯಲ್ಲಿ ಸಕ್ರಿಯ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಹಿಸುತ್ತೇವೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಕಾರಣ, ಮತ್ತೊಮ್ಮೆ ಚುನಾವಣೆ ನಡೆಯುವುದನ್ನು ತಪ್ಪಿಸಲು ಬಿಜೆಪಿಗೆ ಬೆಂಬಲ ನೀಡಿದ್ದೇವೆ. ಆದರೆ ವಿಧಾನಸಭೆಯಲ್ಲಿ ಸಕ್ರಿಯ ವಿರೋಧಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ನ.11ರಂದು ಶರದ್ ಪವಾರ್ ಹೇಳಿದ್ದಾರೆ.
ಬಿಜೆಪಿಗೆ ಬೆಂಬಲ ನೀಡಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ನಮ್ಮ ಬೆಂಬಲವನ್ನು ಯಾರು ಕೇಳಿಯೂ ಇಲ್ಲ. ಬೆಂಬಲ ತಿರಸ್ಕರಿಸುವುದಕ್ಕೆ ಬಿಜೆಪಿಗೆ ಸ್ವಾತಂತ್ರ್ಯವಿದೆ ಎಂದು ಶರದ್ ಪವಾರ್ ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಎನ್.ಸಿ.ಪಿ ಸರ್ಕಾರ ರಚಿಸುವ ಸಾಧ್ಯತೆಗಳಿಲ್ಲದ ಕಾರಣ ಅನಿವಾರ್ಯವಾಗಿ ಬಿಜೆಪಿಗೆ ಬೆಂಬಲ ನೀಡುತ್ತಿರುವುದಾಗಿ ಶರದ್ ಪವಾರ್ ತಿಳಿಸಿದ್ದಾರೆ.
ತಮ್ಮ ವಿರುದ್ಧದ ಪ್ರಕರಣಗಳ ತನಿಖೆ ನಡೆಸದಂತೆ ಮನವೊಲಿಕೆ ಮಾಡಲು ಬಿಜೆಪಿಗೆ ಬೆಂಬಲಿಸುತ್ತಿದ್ದಾರೆ ಎಂಬ ಆರೋಪಗಳನ್ನು ತಳ್ಳಿಹಾಕಿರುವ ಶರದ್ ಪವಾರ್, ಸರ್ಕಾರ ನನ್ನ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲಿ ಎಂದಿದ್ದಾರೆ.