ಬೆಂಗಳೂರು : 'ಅರ್ಕಾವತಿ ಡಿನೊಟಿಫಿಕೇಶನ್' ಪ್ರಕರಣದ ಸಂಬಂಧ ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಬಿಜೆಪಿ ಮುಂದಾಗಿದೆ.
ಈ ಸಂಬಂಧ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿ ಮಾಡಲು ನಿರ್ಧರಿಸಿರುವ ಬಿಜೆಪಿ ನಾಯಕರು, ಹೈಕಮಾಂಡ್ ನ ಅನುಮತಿಗಾಗಿ ಕಾಯುತ್ತಿದ್ದಾರೆ. ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಪಡೆಯುವ ವಿಚಾರವನ್ನು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅನುಮತಿ ನೀಡಿದ ಬಳಿಕ ರಾಜ್ಯಪಾಲರ ಅನುಮತಿ ಪಡೆಯುವ ಸಂಬಂಧ ಮುಂದುವರೆಯಲಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ದೆಹಲಿಗೆ ಭೇಟಿ ನೀಡಲಿರುವ ರಾಜ್ಯ ನಾಯಕರು, ಪ್ರಕರಣ ದಾಖಲಿಸಲು ಹೈಕಮಾಂಡ್ನಿಂದ ಅನುಮತಿ ಪಡೆಯಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಪ್ರಕರಣ ದಾಖಲಿಸಲು ಅನುಮತಿ ನೀಡದಿದ್ದರೆ ಪಕ್ಷಕ್ಕೆ ಮುಜುಗರವಾಗುತ್ತದೆ. ಹೀಗಾಗಿ ಕೇಂದ್ರ ನಾಯಕರ ಅನುಮತಿ ಪಡೆದ ನಂತರ ರಾಜಭವನಕ್ಕೆ ತೆರಳಿದರೆ ಸಕಾರಾತ್ಮಕ ಸ್ಪಂದನೆ ದೊರೆಯಲಿದೆ ಎಂಬುದು ಬಿಜೆಪಿ ನಾಯಕರ ಅಭಿಪ್ರಾಯ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮವಾಗಿ ಡಿನೋಟಿಫಿಕೇಶ್ ಮಾಡಿದ್ದಾರೆ ಎಂದು ಕಳೆದ ವಿಧಾನಸಭಾ ಅಧಿವೇಶನದ ವೇಳೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ಮಾಜಿ ಸಚಿವರಾದ ಎಸ್.ಸುರೇಶ್ ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು.