ನವದೆಹಲಿ : 'ದೆಹಲಿ' ವಿಧಾನಸಭೆ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ ಜನವರಿ/ಫ್ರೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದ್ದು, ಆಮ್ ಆದ್ಮಿ ಪಕ್ಷಕ್ಕೆ ಸವಾಲು ಹಾಕಿದೆ.
ಭಾರತೀಯ ಆಮ್ ಆದ್ಮಿ ಪರಿವಾರ್(ಬಿ.ಎ.ಎ.ಪಿ) ಮೂಲಕ ಬಿಜೆಪಿ ಆಮ್ ಆದ್ಮಿ ಪಕ್ಷವನ್ನು ಎದುರಿಸಲು ಸಜ್ಜುಗೊಂಡಿದೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಾರ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ ಬಿ.ಎ.ಎ.ಪಿ ಮುಖ್ಯಸ್ಥ ನೀರಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದು ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ತಂತ್ರ ರೂಪಿಸಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ಬಿಜೆಪಿ ಮುಖ್ಯಸ್ಥ ಸತೀಶ್ ಉಪಾಧ್ಯಾಯ ಅವರೊಂದಿಗಿನ ಭೇಟಿಯನ್ನು ಬಿ.ಎ.ಎ.ಪಿ ಮುಖಂಡ ನೀರಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಮುಖಂಡರೊಂದಿಗೆ ನಡೆದ ಮಾತುಕತೆಯಲ್ಲಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷ ಪ್ರಾಬಲ್ಯ ಹೊಂದಿರುವ ವಿಧಾನಸಭಾ ಕ್ಷೇತ್ರಗಳನ್ನು ಬಿ.ಎ.ಎ.ಪಿ ಅಭ್ಯರ್ಥಿಗಳ ಮೂಲಕ ಆಪ್ ನ ಜನಪ್ರಿಯತೆಯನ್ನು ಕಡಿಮೆ ಮಾಡಲು ಬಿಜೆಪಿ ಯೋಜನೆ ರೂಪಿಸಿದೆ. ಬಿ.ಎ.ಎ.ಪಿ ಅಭ್ಯರ್ಥಿಗಳು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ಬಿ.ಎ.ಎ.ಪಿ ಮೂಲಕ ಆಮ್ ಆದ್ಮಿ ಪಕ್ಷವನ್ನು ದೆಹಲಿಯಲ್ಲಿ ಮಣಿಸಲು ಯೋಜನೆ ರೂಪಿಸಿರುವ ತಂತ್ರ ಎಷ್ಟರ ಮಟ್ಟಿಗೆ ಫಲ ನೀಡಲಿದೆ ಎಂದು ಕಾದು ನೋಡಬೇಕಿದೆ