ನವದೆಹಲಿ : ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ, ಯುವಕರನ್ನು ಸೆಳೆಯಲು ಭರಪೂರ ಭರವಸೆಗಳನ್ನು ನೀಡಿದೆ. ಜೊತೆಗೆ 5 ವರ್ಷ ಕೇಜ್ರಿವಾಲ್ ಎಂಬ ಹೊಸ ಧ್ಯೇಯಘೋಷವನ್ನೂ ಬಿಡುಗಡೆ ಮಾಡಿದೆ.
ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ ಮೊದಲ ಚುನಾವಣಾ ರ್ಯಾಲಿಯಲ್ಲಿ ಸಾವಿರಾರು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಮುಂದಿನ 5 ವರ್ಷದಲ್ಲಿ 8 ಲಕ್ಷ ಉದ್ಯೋಗ ಸೃಷ್ಟಿ ಮತ್ತು 10 ಲಕ್ಷ ಯುವಕರಿಗೆ ತರಬೇತಿ ನೀಡುವುದಾಗಿ ಭರವಸೆ ನೀಡಿದ್ದಾರೆ.
ರಾಜಧಾನಿಯಲ್ಲಿ ಸಂಪುರ್ಣ ಉಚಿತ ವೈಫೈ ಸೌಲಭ್ಯ ಕಲ್ಪಿಸಲಾಗುವುದು. ಕ್ರೀಡೆಗೆ ಉತ್ತಮ ಮೂಲಸೌಕರ್ಯವನ್ನು ಒದಗಿಸಲಾಗುವುದು. 20 ಹೊಸ ಕಾಲೇಜುಗಳನ್ನು ಸ್ಥಾಪಿಸಲಾಗುವುದು, ಈಗಿರುವ 70 ಕಾಲೇಜುಗಳಲ್ಲಿ ಸೀಟುಗಳನ್ನು ದುಪ್ಪಟ್ಟುಗೊಳಿಸುವುದಾಗಿ ಭರವಸೆ ನೀಡಿದ್ದಾರೆ.