ಕೋಲ್ಕತ್ತಾ : ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ಮೈತ್ರಿಗೆ ಮುಂದಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಹ್ವಾನವನ್ನು ಸಿಪಿಐ(ಎಂ) ತಿರಸ್ಕರಿಸಿದೆ.
ಮಮತಾ ಬ್ಯಾನರ್ಜಿ ಅವರೊಂದಿಗೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿ.ಪಿ.ಎಂ ಮುಖಂಡ, ಸೀತಾರಾಮ್ ಎಚೂರಿ ಸ್ಪಷ್ಟಪಡಿದ್ದಾರೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಬೇಕೆಂದು ಮಮಾತಾ ಬ್ಯಾನರ್ಜಿ ಹೇಳುತ್ತಿದ್ದಾರೆ. ಆದರೆ ಪಶ್ಚಿಮ ಬಂಗಾಳದಲ್ಲಿ ಕೋಮುವಾದಿಗಳು ನೆಲೆಯೂರಲು ಅವಕಾಶ ಮಾಡಿಕೊಟ್ಟಿದ್ದು ಯಾರು ಎಂದು ಎಚೂರಿ ಪ್ರಶ್ನಿಸಿದ್ದಾರೆ. ಬಿಜೆಪಿಗೆ ಬೆಳೆಯಲು ಅವಕಾಶ ಮಾಡಿಕೊಟ್ಟ ಮಮತಾ ಬ್ಯಾನರ್ಜಿ ಇಂದು ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಮತಾ ಬ್ಯಾನರ್ಜಿ ಆಹ್ವಾನವನ್ನು ಕಮ್ಯುನಿಷ್ಟ್ ಪಕ್ಷ ತಿರಸ್ಕರಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ, ರಾಜಕೀಯವಾಗಿ ದಿಕ್ಕೆಟ್ಟಿರುವ ಮಮತಾ ಬ್ಯಾನರ್ಜಿ ಸಿ.ಪಿ.ಐ(ಎಂ) ಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿದೆ ಆದರೆ ಅದರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ನ.18ರಂದು ಟಿ.ವಿ ಸಂದರ್ಶನದಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಕೋಮುವಾದಿ ಪಕ್ಷ ಬಿಜೆಪಿಯನ್ನು ಮಣಿಸಲು ಸಿ.ಪಿ.ಐ(ಎಂ) ನೊಂದಿಗೆ ಕೈಜೋಡಿಸಲು ಸಿದ್ಧ, ಆದರೆ ಕಾಂಗ್ರೆಸ್ ನೇತೃತ್ವ ವಹಿಸಬೇಕೆಂದು ಹೇಳಿದ್ದರು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭದ್ರವಾಗಿ ನೆಲೆಯೂರುತ್ತಿರುವುದರಿಂದ ಈ ಬೆಳವಣಿಗೆ ಕಂಡುಬಂದಿದೆ.
ಮಮತಾ ಬ್ಯಾನರ್ಜಿಯ ಮೈತ್ರಿ ಆಹ್ವಾನಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ, ರಾಜಕೀಯ ಅಸ್ಥಿತ್ವವನ್ನು ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿತ್ತು.