ನವದೆಹಲಿ : ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎಂದು ಕೇಂದ್ರ ವಕ್ಫ್ ಬೋರ್ಡ್ ಹಾಗೂ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ.
ಜಮ್ಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ತಮ್ಮ ಪುತ್ರನನ್ನು ನವೆಂಬರ್ 22ರಂದು ಉತ್ತರಾಧಿಕಾರಿಯಾಗಿ ನೇಮಕ ಮಾಡಲಿದ್ದಾರೆ. ಆದರೆ ವಕ್ಫ್ ಬೋರ್ಡ್ ನ ಸ್ಪಷ್ಟನೆಯಿಂದ ಉತ್ತರಾಧಿಕಾರಿ ನೇಮಕಕ್ಕೆ ಕಾನೂನು ಮಾನ್ಯತೆ ಇಲ್ಲ ಎಂಬುದು ಸ್ಪಷ್ಟವಾಗಿದೆ.
ಉತ್ತರಾಧಿಕಾರಿ ನೇಮಕ ಕಾರ್ಯಕ್ರಮಕ್ಕೆ ದೇಶ ವಿದೇಶಗಳ ಗಣ್ಯರನ್ನು ಆಹ್ವಾನಿಸಿರುವ ಬುಖಾರಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಬುಖಾರಿ ಉತ್ತರಾಧಿಕಾರಿ ನೇಮಕ ಸಮಾರಂಭದ ವಿರುದ್ಧ ದೆಹಲಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಕ್ಫ್ ಬೋರ್ಡ್ ಸ್ಪಷ್ಟನೆ ನೀಡಿದೆ.
ಈ ಬೆಳವಣಿಗೆ ಸಂಬಂಧ ಶೀಘ್ರದಲ್ಲೇ ಸಭೆ ಕರೆಯಲಿದ್ದು, ಅಲ್ಲಿ ವಿಚಾರಣೆ ನಡೆಸಿ, ಇಂಥ ನಿರ್ಧಾರಗಳನ್ನು ಕೈಗೊಂಡಿರುವ ಬುಖಾರಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಕೋರ್ಟ್ಗೆ ವಕ್ಫ್ ಬೋರ್ಡ್ ಹೇಳಿದೆ. ಈ ಪ್ರಕರಣದ ಸಂಬಂಧ ಕಾನೂನಿನ ವ್ಯಾಪ್ತಿಯ ಬಗ್ಗೆ ಕೋರ್ಟ್ ಪ್ರಶ್ನೆಗಳಿಗೆ ಕೇಂದ್ರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ವಕ್ಫ್ ಬೋರ್ಡ್ ವಿವರಣೆಯನ್ನು ಸಲ್ಲಿಸಿದ್ದರು.
ಜಾಮ್ಮಾ ಮಸೀದಿಯಿಂದ ಹೊರಗೆ ಈ ಕಾರ್ಯಕ್ರಮವನ್ನು ಯಾವುದೇ ಕಾನೂನು ಮಾನ್ಯತೆ ಇಲ್ಲದೆ ಮಾಡಬಹುದು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೋರ್ಟ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.