ನವದೆಹಲಿ : '26/11 ಉಗ್ರರ ದಾಳಿ'ಯ ವಿಚಾರಣೆಯಲ್ಲಿ ಪಾಕಿಸ್ತಾನ ಅನುಸರಿಸುತ್ತಿರುವ ವಿಳಂಬ ಧೋರಣೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2008ರ ನ.26ರಂದು ಮುಂಬೈ ನಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ಮೃತಪಟ್ಟ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ನಂತರ ಮಾತನಾಡಿದ ರಾಜನಾಥ್ ಸಿಂಗ್, ಮುಂಬೈ ದಾಳಿ ಪ್ರಕರಣದಲ್ಲಿ ಇನ್ನೂ ಹಲವರಿಗೆ ಶಿಕ್ಷೆಯಾಗಿಲ್ಲ. ಪಾಕಿಸ್ತಾನ ಉಗ್ರರ ವಿಚಾರಣೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ಶೀಘ್ರವೇ ಅಪರಾಧಿಗಳಿಗೆ ಶಿಕ್ಷೆಯಾಗಬೇಕೆಂದು ಸಿಂಗ್ ಒತ್ತಾಯಿಸಿದ್ದಾರೆ.
6 ವರ್ಷಗಳ ಹಿಂದೆ ಇದೇ ದಿನದಂದು ಮುಂಬೈನಲ್ಲಿ ಲಷ್ಕರೆ ತೊಯ್ಬಾ ಉಗ್ರರು ದಾಳಿ ನಡೆಸಿದ್ದು, 166 ಮಂದಿಯನ್ನು ಹತ್ಯೆಗೈದಿದ್ದರು. ಈ ದಾಳಿಯಲ್ಲಿ ಉಗ್ರ ಅಜ್ಮಲ್ ಕಸಬ್ ಮಾತ್ರ ಸೆರೆ ಸಿಕ್ಕಿಬಿದ್ದಿದ್ದ. ಈತನನ್ನು 2012ರಲ್ಲಿ ಗಲ್ಲಿಗೇರಿಸಲಾಯಿತು.
ಹಫೀಜ್ ಸಯ್ಯದ್ ಸೇರಿದಂತೆ ಮುಂಬೈ ದಾಳಿಯ ಅಪರಾಧಿಗಳಿಗೆ ಶೀಘ್ರವೇ ಶಿಕ್ಷೆ ವಿಧಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸಹ ಪಾಕ್ ನೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಒತ್ತಾಯಿಸಿದ್ದರು. ಆದರೆ ಪಾಕಿಸ್ತಾನ ಮಾತ್ರ ಈ ವರೆಗೂ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯ್ಯದ್ ನಿರಪರಾಧಿ ಎಂದೇ ಸಮರ್ಥಿಸಿಕೊಳ್ಳುತ್ತಿದೆ.