ಮುಂಬೈ : 'ಮಹಾರಾಷ್ಟ್ರ' ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಶಿವಸೇನೆಯೊಂದಿಗಿನ ಮಾತುಕತೆ ಮುಕ್ತಾಯಗೊಂಡಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಡಿ.1ರಂದು ಮುಂಬೈನಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಗೂ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಅಧಿಕಾರ ಹಂಚಿಕೆ ಸಂಬಂಧ ಮಹತ್ವದ ಮಾತುಕತೆ ನಡೆಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ದೇವೇಂದ್ರ ಫಡ್ನವೀಸ್, ಬಿಜೆಪಿ ಸರ್ಕಾರದೊಂದಿಗೆ ಸೇರಲು ಶಿವಸೇನೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ ಎಂದು ಹೇಳಿದ್ದಾರೆ.
ಶಿವಸೇನೆ ನಾಯಕರು ಹಾಗೂ ಸಿ.ಎಂ ನಡುವೆ ನಡೆದ ಮಾತುಕತೆಯಲ್ಲಿ ಶಿವಸೇನೆ ಶಾಸಕರಿಗೆ ನೀಡಲಾಗುವ ಸಚಿವ ಸ್ಥಾನದ ಬಗ್ಗೆ ಚರ್ಚೆ ನಡೆದಿದೆ. ಡಿ.8ರಿಂದ ಮಹಾರಾಷ್ಟ್ರದಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಅದಕ್ಕೂ ಮುನ್ನ ಶಿವಸೇನೆ ಬಿಜೆಪಿ ಸರ್ಕಾರದೊಂದಿಗೆ ಕೈಜೋಡಿಸುವ ಸಾಧ್ಯತೆ ದಟ್ಟವಾಗಿದೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚನೆ ಮಾಡಿದ್ದು ಶಿವಸೇನೆ ಬಿಜೆಪಿ ಸರ್ಕಾರದೊಂದಿಗೆ ಸೇರಿದರೆ ಸಮ್ಮಿಶ್ರ ಸರ್ಕಾರ ರಚನೆಯಾದಂತಾಗಲಿದೆ.