ಮುಂಬೈ : 'ಮಹಾರಾಷ್ಟ್ರ'ದಲ್ಲಿ ಬಿಜೆಪಿ ಸರ್ಕಾರದೊಂದಿಗೆ ಶಿವಸೇನೆ ಸೇರ್ಪಡೆಗೊಂಡ ಬೆನ್ನಲ್ಲೇ, ಈ ಬೆಳವಣಿಗೆಯನ್ನು ವಿರೋಧಿಸಿ ಮುಂಬೈ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿದ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಸಂದರ್ಭದಲ್ಲಿ ಶಿವಸೇನೆ ಸರ್ಕಾರದ ವಿರುದ್ಧ ಮತ ಚಲಾಯಿಸಿತ್ತು. ಆದರೆ ಒಂದೇ ತಿಂಗಳಲ್ಲಿ ವಿರೋಧ ಪಕ್ಷ ಸರ್ಕಾರದೊಂದಿಗೆ ಸೇರಿರುವುದರ ವಿರುದ್ಧ ಹೈಕೋರ್ಟ್ ನಲ್ಲಿ ಪಿಐಎಲ್ ದಾಖಲಿಸಲಾಗಿದೆ.
ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಮತಚಲಾವಣೆ ಮಾಡಿದ ನಂತರ ಕನಿಷ್ಠ 6 ತಿಂಗಳ ಕಾಲ ವಿರೋಧಪಕ್ಷ ಸರ್ಕಾರದೊಂದಿಗೆ ಸೇರ್ಪಡೆಯಾಗಲು ಸಾಧ್ಯವಿಲ್ಲ. ಆದರೆ ಶಿವಸೇನೆ ಸರ್ಕಾರದ ವಿರುದ್ಧ ಮತಚಲಾವಣೆ ಮಾಡಿದ ಒಂದೇ ತಿಂಗಳಲ್ಲಿ ಬಿಜೆಪಿ ಸರ್ಕಾರದೊಂದಿಗೆ ಸೇರಿದೆ ಎಂದು ಪಿಐಎಲ್ ದಾಖಲಿಸಿರುವ ಸಾಮಾಜಿಕ ಕಾರ್ಯಕರ್ತ ಕೇತನ್ ತಿರೋಡ್ಕರ್ ಆರೋಪಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಏಕನಾಥ್ ಶಿಂಧೆ ಹಾಗೂ ಶಿವಸೇನೆಯ ಇತರ ಶಾಸಕರು ದೇವೇಂದ್ರ ಫಡ್ನವೀಸ್ ಸಚಿವ ಸಂಪುಟ ಸೇರುವುದನ್ನು ತಡೆಹಿಡಿಯಬೇಕು ಎಂದು ಕೋರ್ಟ್ ಗೆ ಮನವಿ ಮಾಡಲಾಗಿದೆ.