ಬೆಳಗಾವಿ : ಅಧಿಕಾರದ ದುರಾಸೆಯಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ.
ಸುವರ್ಣಸೌಧದಲ್ಲಿ 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಬಿಜೆಪಿ ಪಕ್ಷ ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ, ಶಾಂತಿಯುತ ಪ್ರತಿಭಟನೆ ನಡೆಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತಂದರೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸದನದ ಕಲಾಪಕ್ಕೆ ಅಡ್ಡಿಪಡಿಸಿದರೆ ದ್ರೋಹವೆಸಗಿದಂತಾಗುತ್ತದೆ. ಅಧಿಕಾರದ ದುರಾಸೆಯಿಂದ ಬಿಜೆಪಿ ನಾಯಕರು ಧರಣಿ ನಡೆಸುತ್ತಿದ್ದು, ಸುಗಮ ಕಲಾಪಕ್ಕೆ ಅಡ್ಡಿಯುಂತು ಮಾಡುತ್ತಿದ್ದಾರೆ ಎಂದರು.
ರೈತರ ಬೇಡಿಕೆಗಳ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಬೇಕಾಗಿದೆ. ಇದಕ್ಕೆ ಅಡ್ಡಿಪಡಿಸಿದರೆ ಈ ಭಾಗದ ಜನರಿಗೆ ದ್ರೋಹ ಮಾಡಿದಂತಾಗುತ್ತದೆ. ರಾಜೀನಾಮೆ ಕೇಳುತ್ತಿರುವ ಯಾವುದೇ ಸಚಿವರ ವಿರುದ್ಧ ಆರೋಪಗಳು ಸಾಬೀತಾಗಿಲ್ಲ. ಆರೋಪ ಸಾಬೀತಾದರೆ ಅವರೇ ರಾಜೀನಾಮೆ ಕೊಟ್ಟು ಹೋಗುತ್ತಾರೆ ಎಂದು ತಿಳಿಸಿದರು.