ನವದೆಹಲಿ : ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಸಂಸದರು ಲಕ್ಷ್ಮಣ ರೇಖೆ ದಾಟದಂತೆ ಎಚ್ಚರಿಕೆ ನೀಡಿದ್ದಾರೆ.
ಡಿ.16ರಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಂಸದರು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಮಾತಿನ ಮೇಲೆ ಹಿಡಿತವಿಟ್ಟುಕೊಂಡಿರಬೇಕು ಎಂದು ಹೇಳಿದ್ದಾರೆ.
ಇತ್ತೀಚೆಗೆ ಪಕ್ಷದ ಸಂಸದರು ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷ ಮುಜುಗರಕ್ಕೆ ಒಳಗಾಗುವಂತೆ ಮಾಡಿರುವುದನ್ನು ಹಾಗೂ ಸಭೆಯಲ್ಲಿ ಸಂಸದರು ತಡವಾಗಿ ಬಂದಿರುವುದರ ಬಗ್ಗೆ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಯೊಂದಕ್ಕೂ ಮಿತಿ ಇರುತ್ತದೆ. ಲಕ್ಷ್ಮಣ ರೇಖೆಯನ್ನು ಸಂಸದರು ಮೀರಬಾರದು. ಹೇಳಿಕೆಗಳನ್ನು ನೀಡುವುದರಲ್ಲಿ ಆಸಕ್ತಿ ತೋರಿಸುವ ಬದಲು ಅಭಿವೃದ್ಧಿ ಕಡೆಗೆ ಗಮನಕೊಡಿ' ಎಂದು ಪಕ್ಷದ ಸಂಸದರಿಗೆ ಸಲಹೆ ನೀಡಿದ್ದಾರೆ.
ಈ ಹಿಂದೆ ದೆಹಲಿಯ ಶ್ಯಾಮ್ ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು, 'ವಿವಾದಾದ್ಮಕ ಹೇಳಿಕೆ ನೀಡಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದರು. ಇದು ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿತ್ತಲ್ಲದೇ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿದ್ದವು.