ಬೆಂಗಳೂರು : ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮಠಗಳನ್ನು ಸರ್ಕಾರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಂದ ವಿರೋಧ ವ್ಯಕ್ತವಾಗಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಡಿ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಾನೂನು ಸಚಿವ ಟಿ.ಬಿ ಜಯಚಂದ್ರ ಅವರ ಕ್ರಮಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಸಚಿವರ ಆಕ್ಷೇಪಕ್ಕೆ ಸಿ.ಎಂ ಸಿದ್ದರಾಮಯ್ಯ ಸಹ ಧ್ವನಿಗೂಡಿಸಿದ್ದು. ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಸಿ.ಎಂ ಸಿದ್ದರಾಮಯ್ಯ, ಜೇನು ಗೂಡಿಗೆ ಕಲ್ಲು ಹೊಡೆಯುವ ಕೆಲಸ ಬೇಡ ಎಂದು ಟಿ.ಬಿ ಜಯಚಂದ್ರ ಅವರಿಗೆ ಹೇಳಿದ್ದಾರೆ ಎಂದು ಮಾಧ್ಯಮಗಳು ಪ್ರಕಟಿಸಿವೆ.
ಸಚಿವ ಸಂಪುಟ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವುದರಿಂದ ಕಾನೂನು ಸಚಿವರು ಕಾಯ್ದೆಗೆ ಪರ್ಯಾಯವಾದ ವ್ಯವಸ್ಥೆ ಬಗ್ಗೆ ಚಿಂತನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆ ವಿಧಾನಸಭೆಯಲ್ಲಿ ಮಂಡನೆಯಾಗಿದ್ದ ವಿವಾದಿತ ಮಸೂದೆ ಕೋಲ್ಡ್ ಸ್ಟೋರೇಜ್ ಸೇರಲು ಸಿದ್ಧವಾಗಿದೆ.