ನವದೆಹಲಿ : ಕೇರಳದಲ್ಲಿ 58 ಕ್ರೈಸ್ತ ಧರ್ಮದವರು ಹಿಂದೂ ಧರ್ಮಕ್ಕೆ ವಾಪಸ್ಸಾಗುತ್ತಿದ್ದಂತೆಯೇ ಮತಾಂತರದ ವಿಷಯ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಮರುಮತಾಂತರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿದೇಶಾಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಕೇಂದ್ರ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವವರೆಗೂ ಮತಾಂತರಗಳು ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಸಂಸತ್ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲೂ ಬಿಜೆಪಿ, ಮತಾಂತರ ನಿಷೇಧ ಕಾಯ್ದೆಗೆ ಬೆಂಬಲಿಸುವಂತೆ ವಿರೋಧ ಪಕ್ಷಗಳಿಗೆ ಸವಾಲು ಹಾಕ್ಕಿತ್ತು. ಮರುಮತಾಂತರ ಪ್ರಕರಣಗಳನ್ನೇ ಮುಂದಿಟ್ಟುಕೊಂಡು, ಸಂಸತ್ ಅಧಿವೇಶನದಲ್ಲಿ ಕಲಾಪಕ್ಕೆ ಅಡ್ಡಿ ಉಂಟು ಮಾಡುತ್ತಿದ್ದ ವಿರೋಧ ಪಕ್ಷಗಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಹ ಮತಾಂತರ ನಿಷೇಧ ಕಾಯ್ದೆಗೆ ಬೆಂಬಲ ವ್ಯಕ್ತಪಡಿಸುವಂತೆ ಸವಾಲು ಹಾಕಿದ್ದರು.
ಇದೀಗ ಸಚಿವೆ ಸುಷ್ಮಾ ಸ್ವರಾಜ್ ಸಹ ವಿಪಕ್ಷಗಳಿಗೆ ಸವಾಲು ಹಾಕಿದ್ದು, ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರುವವರೆಗೂ ಮತಾಂತರ ನಿಲ್ಲುವುದಿಲ್ಲ, ಆದ್ದರಿಂದ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳೂ ಕಾಯ್ದೆಯನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ.