ಶ್ರೀನಗರ : 'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಯುತ್ತಿದ್ದು, ಬಿಜೆಪಿ ಶಾಸಕರು ಎನ್.ಸಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.
ಆದರೆ ನ್ಯಾಷನಲ್ ಕಾನ್ಫರೆನ್ಸ್ ಮಾತ್ರ ಸರ್ಕಾರ ರಚನೆ ಸಂಬಂಧ ಬಿಜೆಪಿಯೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದೆ. ಇದೇ ವೇಳೆ ಪಿಡಿಪಿಯೊಂದಿಗೂ ಬಿಜೆಪಿ ಮಾತುಕತೆ ನಡೆಸುತ್ತಿದೆ. ಆದರೆ ಪಿಡಿಪಿ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದಿದೆ.
ಇದೇ ವೇಳೆ ಪಿಡಿಪಿ ಹಾಗೂ ಬಿಜೆಪಿ ಉಭಯ ಪಕ್ಷಗಳೂ ಸರದಿ ಮೂಲಕ (30 ತಿಂಗಳುಗಳ ಅವಧಿಗೆ) ಮುಖ್ಯಮಂತ್ರಿ ಸ್ಥಾನ ಪಡೆಯುವ ಬಗ್ಗೆಯೂ ಮಾತುಕತೆ ನಡೆಯುತ್ತಿವೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರನ್ನು ಬಿಜೆಪಿಯ ರಾಜ್ಯ ಶಾಸಕಾಂಗ ಪಕ್ಷದ ಮುಖಂಡನಾಗಿ ನೇಮಕ ಮಾಡಲಾಗುವುದು ಎಂದು ಮಾಧ್ಯಮಗಳು ವರದಿ ಮಾಡಿವೆ.
ಒಟ್ಟಾರೆ ಪಿಡಿಪಿ, ಎನ್.ಸಿ ಪಕ್ಷಗಳು ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದಿರುವುದು ಸರ್ಕಾರ ರಚನೆ ವಿಳಂಬವಾಗುತ್ತಿದೆ.