ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಸ್ಥಿರ ಸರ್ಕಾರ ರಚಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಬಿಜೆಪಿ ಹೇಳಿದೆ. ಜ.1ರಂದು ರಾಜ್ಯಪಾಲ ಎನ್.ಎನ್ ವೋಹ್ರಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು ಜಮ್ಮು-ಕಾಶ್ಮೀರದಲ್ಲಿ ಸ್ಥಿರ ಸರ್ಕಾರ ಅಸ್ಥಿತ್ವಕ್ಕೆ ಬರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಸಂಬಂಧ ಪಿಡಿಪಿ ಪಕ್ಷದೊಂದಿಗೆ ಮಾತುಕತೆ ನಡೆಸುವುದಾಗಿ ಬಿಜೆಪಿ ರಾಜ್ಯಧ್ಯಕ್ಷ ಜುಗಲ್ ಕಿಶೋರ್ ತಿಳಿಸಿದ್ದಾರೆ.
ಸರ್ಕಾರ ರಚನೆಗೆ ಆತುರ ಇಲ್ಲ, ಜಮ್ಮು-ಕಾಶ್ಮೀರದಲ್ಲಿ ಸ್ಥಿರ ಸರ್ಕಾರ ಅಸ್ಥಿತ್ವಕ್ಕೆ ಬರಬೇಕೆಂಬುದಷ್ಟೇ ಬಿಜೆಪಿ ಗುರಿ ಎಂದು ಜುಗಲ್ ಕಿಶೋರ್ ಹೇಳಿದ್ದಾರೆ. ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿಕೆ ಮೂಲಕ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಸಾಧ್ಯತೆ ಬಗ್ಗೆ ಡಿ.31ರಂದೇ ಸುಳಿವು ದೊರೆತಿತ್ತು. ಇದೀಗ ಬಿಜೆಪಿ ಸಹ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಶ್ಲಾಘಿಸಿದ್ದ ಮೆಹಬೂಬಾ ಮುಫ್ತಿ, ವಾಜಪೇಯಿ ಅವರು ದೂರದೃಷ್ಟಿ ಹೊಂದಿದ್ದ ಜವಾಬ್ದಾರಿಯುತ ವ್ಯಕ್ತಿಯಾಗಿದ್ದು, ಅವರ ನೀತಿಗಳನ್ನು ನಾವು ಮತ್ತೆ ವಾಪಸ್ ತರಬೇಕಿದೆ ಎಂದು ಹೇಳಿದ್ದರು. ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಹೊಗಳಿದ್ದ ಪಿಡಿಪಿ ಮುಖ್ಯಸ್ಥೆಯ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಸ್ವಾಗತಿಸಿದ್ದರು.