ನವದೆಹಲಿ : ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವುದನ್ನು ನಿಲ್ಲಿಸಿದರೆ ಭಾರತ ಪಾಕ್ ಜೊತೆ ಉತ್ತಮ ಸಂಬಂಧವನ್ನಿಟ್ಟುಕೊಳ್ಳಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಗಡಿಯಲ್ಲಿ ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದರು. ಭಾರತ ಮಾತ್ರ ಪಾಕ್ ಜತೆ ಸ್ನೇಹದಿಂದಿರಲು ಬಯಸುತ್ತಿದೆ. ಆದರೆ ಇದನ್ನು ಅರಿಯದೆ ಪಾಕ್ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಾಕ್ನ ಕದನ ವಿರಾಮ ಉಲ್ಲಂಘನೆಗೆ ಸಂಬಂಧಿಸಿದಂತೆ ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಜನಾಥ್ ಸಿಂಗ್, ಪಾಕಿಸ್ತಾನ ನಮ್ಮ ನೆರೆಯ ರಾಷ್ಟ್ರ, ನಾವು ನಮ್ಮ ಎಲ್ಲ ನೆರೆಹೊರೆಯವರ ಜತೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳ ಬಯಸುತ್ತೇವೆ ಎಂದರು.
ಜಮ್ಮು ಮತ್ತು ಕಾಶ್ಮೀರದ ಸಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದರ ಪರಿಣಾಮ 6 ಮಂದಿ ಭಾರತೀಯರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಿಂಗ್, ಇನ್ನು ಮುಂದೆಯಾದರೂ ಪಾಕ್ ಸರ್ಕಾರ ಕೂಡ ಕದನ ವಿರಾಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಆಗ ಮಾತ್ರ ಸ್ನೇಹ ಸಂಬಂಧ ಗಟ್ಟಿಯಾಗಲು ಸಾಧ್ಯ ಎಂದು ಹೇಳಿದ್ದಾರೆ.
ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸಿದ್ದ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರ ಕೈಕುಲುಕಿದ್ದ ಪ್ರಧಾನಿ ಮೋದಿ ನಾವು ಕೇವಲ ಹಸ್ತಲಾಘವವಷ್ಟನ್ನೇ ಬಯಸುತ್ತಿಲ್ಲ ಆಳವಾದ ಸಂಬಂಧವನ್ನು ಕೂಡ ಅಪೇಕ್ಷಿಸುತ್ತೇವೆ ಎಂದು ಹೇಳಿದ್ದರು. ಆದರೆ ಇದನ್ನು ಮರತು ಪಾಕ್ ಸರ್ಕಾರ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದು ಸರಿಯಲ್ಲ ಎಂದು ಸಿಂಗ್ ಹೇಳಿದ್ದಾರೆ.