ಬೆಂಗಳೂರು : 'ಕಾಂಗ್ರೆಸ್ ಮುಕ್ತ ಕರ್ನಾಟಕ'ದ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ನಾನು ಮಾಡಿದ ತಪ್ಪಿನಿಂದಾಗಿ 7 ವರ್ಷಗಳ ಹಿಂದೆಯೇ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣವಾಗಿತ್ತು ಎಂದು ಹೇಳಿದ್ದಾರೆ.
ಜ.5ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಳು ವರ್ಷದ ಹಿಂದೆ ಬಿಜೆಪಿಗೆ ಅಧಿಕಾರ ನೀಡುವ ಮೂಲಕ ರಾಜ್ಯದ ಜನತೆ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡಿದ್ದರು ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದರು ಎಂಬ ಭಯ ಕಾಂಗ್ರೆಸ್ ನಾಯಕರಲ್ಲಿತ್ತು. ಆದ್ದರಿಂದ ಅಮಿತ್ ಶಾ ಅವರನ್ನು ಮಾರಿಗುಡಿ ಪೂಜಾರಿ ಎಂದು ಟೀಕಿಸಿದ್ದರು, ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಮಾರಿಗುಡಿ ಪೂಜಾರಿ ಎಂದದ್ದು ತಪ್ಪು ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಮ್ಮ ಭೇಟಿ ವೇಳೆ ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡದೇ ಇರುವುದು ತಮಗೆ ನಿರಾಸೆ ಮೂಡಿಸಿದೆ. ಕರ್ನಾಟಕ ಏಕೆ ಕಾಂಗ್ರೆಸ್ ಮುಕ್ತವಾಗಬೇಕೆಂಬುದನ್ನು ಅಮಿತ್ ಶಾ ಸ್ಪಷ್ಟಪಡಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಇದೇ ವೇಳೆ ಭ್ರಷ್ಟಾಚಾರದಲ್ಲಿ ಬಿಜೆಪಿಗೆ ಇತಿಹಾಸವೇ ಇದೆ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಟೀಕಿಸಿರುವ ಕುಮಾರಸ್ವಾಮಿ, ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವ ಸಿದ್ದರಾಮಯ್ಯ ಅವರು ಕಳೆದ ಒಂದೂವರೆ ವರ್ಷದಿಂದ ಮಾಡುತ್ತಿರುವುದು ಏನು ಎಂದು ಪ್ರಶ್ನಿಸಿದ್ದಾರೆ. ಭ್ರಷ್ಟಾಚಾರದಲ್ಲಿ ಬಿಜೆಪಿಗೆ ಇತಿಹಾಸವೇ ಇದ್ದರೆ ಅದನ್ನು ಬಹಿರಂಗಪಡಿಸಲಿ ಎಂದು ಕುಮಾರಸ್ವಾಮಿ ಸಿ.ಎಂ ಗೆ ಸವಾಲು ಹಾಕಿದ್ದಾರೆ. ಕಲ್ಲಿದ್ದಲು ಖರೀದಿಯಲ್ಲಿ 25 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ದಾಖಲೆ ನೀಡುವಂತೆ ಮನವಿ ಮಾಡಿದ್ದೆ ಆದರೆ ಈವರೆಗೂ ದಾಖಲೆ ಏಕೆ ನೀಡಿಲ್ಲ ಎಂದು ಹೆಚ್.ಡಿ.ಕೆ ಪ್ರಶ್ನಿಸಿದ್ದಾರೆ.