ಅನಂತಪುರ : 'ಆಂಧ್ರಪ್ರದೇಶ'ದ ಅನಂತಪುರ ಜಿಲ್ಲೆಯಲ್ಲಿ ಜ.7ರಂದು ಸರ್ಕಾರಿ ಬಸ್ ಅಪಘಾತ ಸಂಭವಿಸಿದ್ದು 22 ಜನರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
60ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರ್ಕಾರಿ ಬಸ್ ಅನಂತಪುರ ಜಿಲ್ಲೆಯ ಮಡಕಶಿರ ಪ್ರದೇಶದಿಂದ ಪೆನುಕೊಂಡಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ 10 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸೇರಿಸುವ ಮಾರ್ಗದಲ್ಲಿ 10 ಜನರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಬಸ್ ನಲ್ಲಿದ್ದ ಬಹುತೇಕರು ಪ್ರಯಾಣಿಕರು ವಿದ್ಯಾರ್ಥಿಗಳಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರು ಆಸ್ಪತ್ರೆಗೆ ಸೇರಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾಗಿರುವ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಬಸ್ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ದೊಡ್ಡ ಕಂದಕವನ್ನು ತೋಡಿ ಹಾಗೆ ಬಿಡಲಾಗಿತ್ತು. ಕಿರಿದಾದ ರಸ್ತೆಯಲ್ಲಿ ಬಸ್ ಸಂಚರಿಸುತ್ತಿದ್ದ ವೇಳೆ ಆಯತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಉರುಳಿ ಬಿದ್ದಿದ್ದ ಬಸ್ ನ್ನು ಮೇಲೆತ್ತಲಾಗಿದ್ದು, ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಆಂಧ್ರ ಸಿ.ಎಂ ಚಂದ್ರಬಾಬು ನಾಯ್ಡು, ಮೃತ ಗುಟುಂಬಗಳಿಗೆ ತಲಾ 5 ಲಕ್ಷರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗಳಾದವರಿಗೆ 1 ಲಕ್ಷರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಘಟನೆ ಬಗ್ಗೆ ಉನ್ನತ ತನಿಖೆಗೆ ಚಂದ್ರಬಾಬು ನಾಯ್ಡು ಆದೇಶಿಸಿದ್ದಾರೆ.