BW News Bureau : ಶಾಂತಿನಗರ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದಿರುವ ಸುಮಾರು ಮೂರು ಸಾವಿರ ಕೋಟಿ ರೂ.ಗಳಷ್ಟು ಅವ್ಯವಹಾರ ಪ್ರಕರಣದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಭೂ ಕಬಳಿಕೆದಾರರ ವಿರೋಧಿ ಹೋರಾಟ ಸಮಿತಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಎ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ಸಚಿವ ಮಹದೇವ ಪ್ರಸಾದ್ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವಿಧಾನಸೌಧದ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಿದ ದೊರೆಸ್ವಾಮಿ ಮತ್ತು ರಾಮಸ್ವಾಮಿಯವರು ಶಾಂತಿನಗರ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಸಚಿವರಿಗೆ ಮನವಿ ಸಲ್ಲಿಸಿದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಕುಟುಂಬದವರ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಹದೇವ ಪ್ರಸಾದ್ ಅವರು, ಶಾಂತಿನಗರ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 2004ರಲ್ಲಿ ನಿವೇಶನಗಳ ಹಂಚಿಕೆಯಾಗಿದೆ. ಈ ಸಂಬಂಧ ಈಗ ದೂರು ಕೇಳಿಬಂದಿದೆ. ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ನಡೆಸುವ ಭರವಸೆ ನೀಡಿದರು.
ಈ ಸಂಬಂಧ ಅಧಿಕಾರಿಗಳ ಸಭೆ ಕರೆದು ತಿಂಗಳಾಂತ್ಯದೊಳಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು. ಪ್ರಕರಣವನ್ನು ಲೋಕಾಯುಕ್ತಕ್ಕೆ ಅಥವಾ ಸಿಬಿಐಗೆ ವಹಿಸಲಿದ್ದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್ ಅವರು ಇದು ಮಾಜಿ ಪ್ರಧಾನಿ ದೇವೇಗೌಡರ ಕೃಪಾಪೋಷಿತ ಆರೋಪ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಸಂಬಂಧ ನಾನು ಯಾವುದೇ ತನಿಖೆಗೆ ಸಿದ್ಧ ಎಂದು ತಿಳಿಸಿದ್ದಾರೆ.