ನವದೆಹಲಿ : ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದ ಸಾಕ್ಷಿ ಮಹಾರಾಜ್ ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದರಿಂದ ತಮ್ಮ ವಿರುದ್ಧ ಕ್ರಮವೇಕೆ ಜರುಗಿಸಬಾರದು ಎಂದು ಬಿಜೆಪಿ ಸಾಕ್ಷಿ ಮಹಾರಾಜ್ ಅವರನ್ನು ಪ್ರಶ್ನಿಸಿದೆ.
ಶೋಕಾಸ್ ನೊಟೀಸ್ ಗೆ ಉತ್ತರಿಸಲು 10 ದಿನಗಳ ಅವಕಾಶ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪಕ್ಷಕ್ಕೆ ಮುಜುಗರ ಉಂಟುಮಾಡುವಂತೆ ನೀಡುತ್ತಿರುವ ಹೇಳಿಕೆಗಳು ಪಕ್ಷ ವಿರೋಧಿ ಚಟುವಟಿಕೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.
ಮಹಾತ್ಮಾ ಗಾಂಧಿ ಹತ್ಯೆ, ಹಿಂದೂ ಮಹಿಳೆಯರು 4 ಮಕ್ಕಳನ್ನು ಹೆರಬೇಕು ಎಂಬಂತಹ ವಿವಾದಾತ್ಮಕ ಹೇಳಿಕೆಗಳನ್ನು ಸಾಕ್ಷಿ ಮಹಾರಾಜ್ ನೀಡಿದ್ದರು. ಇತ್ತೀಚಿನ ದಿನಗಳಲ್ಲಿ ಸಾಕ್ಷಿ ಮಹಾರಾಜ್ ಅವರ ಹೇಳಿಕೆಗಳು ಬಿಜೆಪಿಗೆ ಮುಜುಗರ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಶೋಕಾಸ್ ನೊಟೀಸ್ ಜಾರಿ ಮಾಡಿದ್ದಾರೆ.
ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆಗಳಿಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡುವ ಮೂಲಕ ವಿವಾದಾತ್ಮಕ ಹೇಳಿಕೆಗಳಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು. ಅಲ್ಲದೇ ಕೆಲ ಸಂಸದರು ನೀಡುತ್ತಿರುವ ಅಸಂಬದ್ಧ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿವೆ ಎಂದು ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದರು ಈ ಹಿನ್ನೆಲೆಯಲ್ಲಿ ಸಾಕ್ಷಿ ಮಹಾರಾಜ್ ಗೆ ಶೋಕಾಸ್ ನೋಟೀಸ್ ಜಾರಿಮಾಡಲಾಗಿದೆ.