ಬೆಂಗಳೂರು : ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ರಕ್ಷಣೆ ಮಾಡಿದರೆ ವರ್ಷಕ್ಕೆ 10 ಸಾವಿರ ಕೋಟಿ ರೂ. ಆದಾಯ ಗಳಿಸಲು ಸಾಧ್ಯವಿದೆ. ರಾಷ್ಟ್ರಮಟ್ಟದಲ್ಲಿ 6.40 ಲಕ್ಷ ಎಕರೆ ವಕ್ಫ್ ಆಸ್ತಿ ಒತ್ತುವರಿಯಾಗಿದೆ. ರಾಜ್ಯದಲ್ಲಿ 1.40 ಲಕ್ಷ ಎಕರೆ ಇದ್ದು ಅದರಲ್ಲಿ ಅರ್ಧದಷ್ಟು ಒತ್ತುವರಿ ಆಗಿದೆ. ಈ ಆಸ್ತಿಯನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ವಿವಿಧ ಕಾಯ್ದೆ ಜಾರಿಗೆ ತಂದಿದೆ. ಅದರಂತೆ ಕಬಳಿಕೆದಾರರ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದು ಎಂದರು.
ತಪ್ಪಿತಸ್ಥರಿಗೆ 2 ವರ್ಷ ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ. ಕ್ರಿಮನಲ್ ಮೊಕದ್ದಮೆ ದಾಖಲಿಸಲು ಗೃಹ ಸಚಿವರು ಈಗಾಗಲೇ ಸುತ್ತೋಲೆ ಹೊರಡಿಸಿದ್ದಾರೆ. ನಾನು ಮತ್ತೊಮ್ಮೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ತಿಳಿಸಿದರು.
ಅಲ್ಪಸಂಖ್ಯಾತರು ಅನ್ಯಾಯವಾಗಿದೆ ಎಂದು ಕೊರಗಬಾರದು. ಭಯದ ನೆರಳಲ್ಲಿ ಬದುಕಬಾರದು. ಇದಕ್ಕೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದರು. ಶ್ರೀರಂಗಪಟ್ಟಣದಲ್ಲಿ ಟಿಪ್ಪು ವಿವಿ ಸ್ಥಾಪನೆಗೆ ಜಮೀನು ಕೊಟ್ಟರೆ 10 ಕೋಟಿ ರೂ. ದೇಣಿಗೆ ನೀಡುವುದಾಗಿ ಉದ್ಯಮಿ ಜಿಯಾ ಉಲ್ಲಾ ಖಾನ್ ಹೇಳಿದ್ದರು. ಆದರೆ ಟಿಪ್ಪು ವಿವಿ ಬಗ್ಗೆ ಕೆಲ ತಕರಾರು ಇವೆ. ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.