ನವದೆಹಲಿ : ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗುತ್ತಿರುವುದು ಬಿಜೆಪಿ ಅಲ್ಲ, ಬದಲಾಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪಕ್ಷದ ಹಿರಿಯ ನಾಯಕರು ಕಾಂಗ್ರೆಸ್ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗುತ್ತಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ಜ.13ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳುವುದಕ್ಕೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ನಿರಂತರವಾಗಿ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ, ಪಕ್ಷವನ್ನು ಸಂಘಟಿಸುವ ಸಂಬಂಧ ಚರ್ಚೆ ನಡೆಸಲು ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಿತು. ಇದೇ ಸಭೆಯಲ್ಲಿ ಎನ್.ಡಿ.ಎ ಸರ್ಕಾರದ ತಪ್ಪು ನಿರ್ಧಾರಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿಣಿಯ 30 ಸದಸ್ಯರು ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನ ಸದಸ್ಯತ್ವ ಹೆಚ್ಚಿಸುವುದರ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಸಲಾಯಿತು ಎಂದು ಅಂಬಿಕಾ ಸೋನಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಅಧ್ಯಕ್ಷಗಾದಿ ನೀಡುವುದರ ಬಗ್ಗೆ ಚರ್ಚೆ ನಡೆಸುವುದು ಕಾರ್ಯಕಾರಿಣಿ ಸಭೆಯ ಮುಖ್ಯ ಉದ್ದೇಶವಾಗಿರಲಿಲ್ಲ, ಆದ್ದರಿಂದ ರಾಹುಲ್ ಗಾಂಧಿಗೆ ಹೆಚ್ಚಿನ ಜವಾಬ್ದಾರಿ ನೀಡುವುದರ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಕಾಂಗ್ರೆಸ್ ನಾಯಕರು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.