ಬೆಂಗಳೂರು : ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಫೆ.2ರಿಂದ ಪ್ರಾರಂಭವಾಗಲಿದ್ದು, 10 ದಿನಗಳ ಕಾಲ ನಡೆಯಲಿದೆ. ಮುಂದಿನವಾರ ನಡೆಯಲಿರುವ ರಾಜ್ಯ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗುತ್ತದೆ.
ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ರಾಜ್ಯಪಾಲ ವಿ.ಆರ್.ವಾಲಾ ಅವರು ಚೊಚ್ಚಲ ಭಾಷಣ ಮಾಡಲಿದ್ದಾರೆ. ರಾಜ್ಯದ ರಾಜಪಾಲರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಜಂಟಿ ಅಧಿವೇಶನ ಬರುತ್ತಿದೆ. ವಿಧಾನಸಭೆ ನವೀಕರಣ ಕಾರ್ಯ ನಡೆಯುತ್ತಿದ್ದು, ಈ ತಿಂಗಳ 25ರೊಳಗೆ ಪೂರ್ಣಗೊಳ್ಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಜನವರಿಯಲ್ಲೇ ನಡೆಸಬೇಕಾಗಿದ್ದ ಜಂಟಿ ಅಧಿವೇಶನವನ್ನು ವಿಧಾನಸಭೆ ನವೀಕರಣದ ಹಿನ್ನೆಲೆಯಲ್ಲಿ ಫೆಬ್ರವರಿಗೆ ಮುಂದೂಡಲಾಗಿದೆ. ಅಧಿವೇಶನದ ದಿನಾಂಕ ನಿಗದಿಪಡಿಸುವ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು ವಿಧಾನಸಭಾಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿದ ನಂತರ ದಿನಾಂಕ ನಿಗದಿ ಮಾಡಿದ್ದಾರೆ.
ಫೆ.2ರಂದು ವಿಧಾನಸಭೆ ಸಭಾಂಗಣದಲ್ಲಿ ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲರು ಸರ್ಕಾರದ ನಿಲುವು ಹಾಗೂ ಮುಂದಿನ ಒಂದು ವರ್ಷದ ಅವಧಿಯಲ್ಲಿ ಅನುಷ್ಠಾನಗೊಳ್ಳಲಿರುವ ಯೋಜನೆ ಹಾಗೂ ಕಾರ್ಯಕ್ರಮಗಳ ರೂಪುರೇಷೆ ಕುರಿತು ಭಾಷಣ ಮಾಡುವರು. ಆನಂತರ ವಿಧಾನಸಭೆ ಮತ್ತು ವಿಧಾನ ಪರಿಷತ್ ಪ್ರತ್ಯೇಕವಾಗಿ ಸಭೆ ಸೇರಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಸಿ ವಂದನೆ ಸಲ್ಲಿಸಲಿವೆ.