ಬೆಂಗಳೂರು : ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಪ್ರಕರಣ ಕುರಿತಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಶೀಘ್ರವೇ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗುವುದು. ಅನುಮತಿ ದೊರೆತ ನಂತರ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳನ್ನೂ ಸಂಗ್ರಹಿಸಲಾಗಿದೆ. ಎಲ್ಲವನ್ನೂ ರಾಜ್ಯಪಾಲರಿಗೆ ಸಲ್ಲಿಸಲಾಗುವುದು ಎಂದರು.
ರಾಜಭವನವನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಸಿದ್ದರಾಮಯ್ಯ ಅವರ ಆಪಾದನೆ ಪ್ರಸ್ತಾಪಿಸಿದ ಯಡಿಯೂರಪ್ಪ, ಯಾವ ಪಕ್ಷ ರಾಜಭವನವನ್ನು ದುರುಪಯೋಗ ಮಾಡಿಕೊಂಡಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದು ಹೇಳಿದರು.
ಹಿಂದೆ ನಮ್ಮ ಬಿಜೆಪಿ ಸರ್ಕಾರದ ವೇಳೆ ಪ್ರತಿಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ರಾಜಭವನವನ್ನು ದುರುಪಯೋಗಪಡಿಸಿಕೊಂಡಿತ್ತು. ಅದನ್ನು ಬಿಜೆಪಿ ಈಗ ಮಾಡುವುದಿಲ್ಲ. ಅದರ ಅಗತ್ಯವೂ ಇಲ್ಲ ಎಂದು ಹೇಳಿದರು.