ನವದೆಹಲಿ : ಫೆ.7ರಂದು ದೆಹಲಿ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ದೆಹಲಿಯ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೆಹಲಿಯ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ದೆಹಲಿಯ 7೦ ವಿಧಾನಸಭಾ ಕ್ಷೇತ್ರಗಳಿಗೂ ಈಗಾಗಲೇ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇಂದು ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಮಾಡಲಿದೆ.
ಏತನ್ಮಧ್ಯೆ ಬಿಜೆಪಿ ಹೈಕಮಾಂಡ್ ಕಿರಣ್ ಬೇಡಿಯವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲು ಮುಂದಾಗಿರುವುದು ದೆಹಲಿ ಬಿಜೆಪಿ ಸ್ಥಳೀಯ ಮುಖಂಡರಿಗೆ ಅಸಮಾಧಾನ ತಂದಿದೆ ಎಂದು ಮೂಲಗಳು ತಿಳಿಸಿವೆ.
ಬೇಡಿ ಸಿಎಂ ಅಭ್ಯರ್ಥಿಯಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬಿಜೆಪಿ ಮುಖಂಡ ಜಗದೀಶ್ ಮುಖಿ, ಭಾರತೀಯ ಜನತಾ ಪಕ್ಷ ಕುಟುಂಬ ರಾಜಕಾರಣದ ಪಕ್ಷವವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಂತೆ ಪಕ್ಷ ತನ್ನದೇ ನಿರ್ಧಾರ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಅಲ್ಲದೇ ದೆಹಲಿ ಬಿಜೆಪಿ ಘಟಕದಲ್ಲಿ ಯಾವುದೇ ಅಸಮಾಧಾನವಿಲ್ಲ. ಕೇಂದ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ತಿಳಿಸಿದ್ದಾರೆ.