ನವದೆಹಲಿ : ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರಿಗೆ ದೆಹಲಿ ಪೋಲೀಸರು ನೋಟೀಸ್ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆರಡು ದಿನಗಳಲ್ಲಿ ಶಶಿ ತರೂರ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಸುನಂದಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ತರೂರ್ ಅವರಿಗೆ ನೋಟೀಸ್ ನೀಡಲಾಗಿದೆ. 48 ಗಂಟೆಗಳೊಳಗೆ ಸಿಆರ್ಪಿಸಿ ಸೆಕ್ಷನ್ 160 ಅಡಿಯಲ್ಲಿ ತರೂರ್ ಅವರನ್ನು ವಿಚಾರಣೆಗೆ ಒಳಪಸಲಾಗುವುದು ಎಂದು ತಿಳಿಸಿದ್ದಾರೆ.
ವಿಶೇಷ ತನಿಖಾ ತಂಡ ಆದಷ್ಟೂ ಬೇಗ ಈ ಪ್ರಕರಣವನ್ನೂ ಇತ್ಯರ್ಥಗೊಳಿಸಲಿದೆ. ಈಗಾಗಲೇ ಈ ತಂಡ ಪ್ರಮುಖ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಇನ್ನುಳಿದಂತ ಕೆಲವರನ್ನು ವಿಚಾರಣೆಗೆ ಒಳಪಡಿಸಿ, ಈ ಪ್ರಕರಣ ಬಗ್ಗೆ ಮಾಹಿತಿ ನೀಡಲಿದೆ ಎಂದು ಹೇಳಿದರು.
ಈ ನಡುವೆ ದೆಹಲಿ ಪೊಲೀಸರ ನೋಟಿಸ್ ಗೆ ಉತ್ತರ ನೀಡಿರುವ ಶಶಿ ತರೂರ್, ಸಧ್ಯ ನಾನು ದೆಹಲಿಯಿಂದ ಹೊರಗಿದ್ದೇನೆ. ಪ್ರಕರಣ ಸಂಬಂಧ ಶೀಘ್ರವೇ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.