ಬೆಂಗಳೂರು : ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ಒಂದು ಎಕರೆಯೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿದ್ದಾರೆ.
ಅರ್ಕಾವತಿ ಡಿನೋಟಿಫಿಕೇಷನ್ ನಡೆದಿರುವುದು ಹೆಚ್.ಡಿ ಕುಮಾರಸ್ವಾಮಿ-ಯಡಿಯೂರಪ್ಪ ಅವಧಿಯಲ್ಲಿ, ಅಧಿಕಾರಿಗಳಿಂದ ಅನುಮತಿ ಪಡೆಯದೇ ಡಿನೋಟಿಫಿಕೇಷನ್ ಮಾಡಿರುವುದಕ್ಕೆ ನನ್ನನ್ನು ಹೊಣೆಯನ್ನಾಗಿ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರತ್ಯಾರೋಪ ಮಾಡಿದ್ದಾರೆ.
ನಾನು ಒಂದು ಎಕರೆ ಜಾಗವನ್ನು ಡಿನೋಟಿಫಿಕೇಷನ್ ಮಾಡದೇ ಇರುವುದಕ್ಕಾಗಿಯೇ ನ್ಯಾ.ಕೆಂಪಣ್ಣ ಸಮಿತಿ ರಚಿಸಿದ್ದೇನೆ, ಸಮಿತಿಗೆ ಸೂಕ್ತ ದಾಖಲೆಗಳನ್ನು ನೀಡುತ್ತಿಲ್ಲ ಎಂಬುದು ಸುಳ್ಳು ಆರೋಪ, ನನ್ನ ವಿರುದ್ಧ ಕುಮಾರಸ್ವಾಮಿ ರಾಜಕೀಯ ಪಿತೂರಿ ನಡೆಸುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
ನನ್ನ ವಿರುದ್ಧ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಅವರು ಈ ಹಿಂದೆ ಸಿಬಿಐನ್ನು ಚೋರ್ ಬಚಾವೋ ಸಂಸ್ಥೆ ಎಂದು ಲೇವಡಿ ಮಾಡಿದ್ದರು, ಆದರೆ ಈಗ ಅವರೇ ಡಿನೋಟಿಫಿಕೇಷನ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಆಗ್ರಹಿಸುತ್ತಿದ್ದಾರೆ. ಚೋರ್ ಬಚಾವೋ ಸಂಸ್ಥೆ ಏಕಾಏಕಿ ಸಚ್ ಬಚಾವೋ ಸಂಸ್ಥೆಯಾಗಿದ್ದು ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಸಿಎಂ ವಿರುದ್ಧ ದಾಖಲೆ ಬಿಡುಗಡೆ ಮಾಡಿದ್ದರು.