ಲಖ್ನೌ : ಉತ್ತರ ಪ್ರದೇಶದ ಸರ್ಕಾರಕ್ಕೆ ರಾಮಭಕ್ತರಿಂದ ಬರೋಬ್ಬರಿ 300 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.
ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಂದ ಉತ್ತರ ಪ್ರದೇಶ ಸರ್ಕಾರದ ಬೊಕ್ಕಸಕ್ಕೆ ಇಷ್ಟೊಂದು ಬೃಹತ್ ಮೊತ್ತದ ಹಣ ಜಮಾವಣೆಯಾಗಿದೆ. ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಸುಪ್ರೀಂ ಕೋರ್ಟ್ ಗೆ ದಾಖಲಿಸಿರುವ ಆರ್.ಟಿ.ಐ ಮಾಹಿತಿಯ ಮೂಲಕ ಈ ವಿಷಯ ಬಹಿರಂಗವಾಗಿದೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ್ ಲಲ್ಲಾ ಪ್ರತಿಮೆಗೆ ಪೂಜೆ ಸಲ್ಲಿಸಲು ತೆರಳುವ ಭಕ್ತಾದಿಗಳಿಗೆ ಅಲ್ಲಿನ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಒದಗಿಸಿಲ್ಲ, ಭಕ್ತಾದಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸುಬ್ರಹ್ಮಣಿಯನ್ ಸ್ವಾಮಿ ಮನವಿ ಮಾಡಿದ್ದಾರೆ.
ರಾಮನ ಭಕ್ತರಿಂದ ಸರ್ಕಾರಕ್ಕೆ 300 ಕೋಟಿ ರೂ ಆದಾಯವಿದೆ. ಆದರೂ ಸರ್ಕಾರ ಯಾವುದೇ ಸೌಲಭ್ಯ ಕಲ್ಪಿಸಿಲ್ಲ, ಹಾಗಾದರೆ ಸರ್ಕಾರಕ್ಕೆ ಬಂದಿರುವ ಹಣವನ್ನು ಯಾವುದಕ್ಕೆ ಉಪಯೋಗಿಸಲಾಗಿದೆ ಎಂದು ಸ್ವಾಮಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.
ವಿವಾದಿತ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಸುಪ್ರೀಂ ಕೋರ್ಟ್ 1996ರಲ್ಲಿ ಹೇಳಿತ್ತು, ಆದರೆ ಸೌಲಭ್ಯಗಳನ್ನು ಕಲ್ಪಿಸಬಾರದು ಎಂದು ಎಲ್ಲಿಯೂ ಹೇಳಿಲ್ಲ ಎಂದು ಸುಪ್ರೀಂ ಕೋರ್ಟ್ ನಲ್ಲಿ ಸ್ವಾಮಿ ವಾದಿಸಿದ್ದಾರೆ. ಈ ಬಗ್ಗೆ ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಹೆಚ್.ಎಲ್ ದತ್ತು ತಿಳಿಸಿದ್ದಾರೆ.