ಹಾಸನ : ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ ಅಂಚಿನಲ್ಲಿವೆ. ಇದನ್ನು ರಕ್ಷಣೆ ಮಾಡಬೇಕಾದರೆ ಶಾಸನಬದ್ಧವಾದ ಹೊಸ ಕಾನೂನು ಜಾರಿ ಮಾಡಬೇಕಾದ ಅಗತ್ಯವಿದ್ದು, ಸಂವಿಧಾನಕ್ಕೂ ತಿದ್ದುಪಡಿ ಮಾಡಬೇಕಾದ ಪರಿಸ್ಥಿತಿ ಅಗತ್ಯವಾಗಿದೆ ಎಂದರು.
ಇಂಗ್ಲಿಷ್ ಭಾಷೆಯ ಹೆಸರಿನಲ್ಲಿ ಇಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾದೇಶಿಕ ಭಾಷೆಗಳ ಮೇಲೆ ಸವಾರಿ ಮಾಡುತ್ತಿವೆ. ಇದರಿಂದ ನಮ್ಮ ನೆಲದಲ್ಲೇ ಮಾತೃಭಾಷೆಗೆ ಅಪಾಯ ಬಂದಿದೆ. ಇದನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಿವಿಮಾತು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ನೂರರ ಹೊಸ್ತಿಲಿನಲ್ಲಿದೆ. ಇದೊಂದು ಐತಿಹಾಸಿಕ ಹಾಗೂ ಮಹತ್ವದ ಸಂದರ್ಭ. ಈ ಸಂದರ್ಭದಲ್ಲಿ ನೆನೆಯಲೇಬೇಕಾದ ವ್ಯಕ್ತಿಯೊಬ್ಬರಿದ್ದಾರೆ. ಅವರೇ ನಾಡಪ್ರಭು ನಾಲ್ವಡಿ ಕೃಷ್ಣರಾಜ ಒಡೆಯರ್. ಅರಮನೆ ಗುರುಮನೆಗಳಲ್ಲಿದ್ದ ಸಾಹಿತ್ಯವನ್ನು ಜನಸಾಮಾನ್ಯರತ್ತ ತರುವ ಮಹೋದ್ದೇಶದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದರು.
ಪ್ರಭುವಾಗಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಡಳಿತವನ್ನು ನಡೆಸಿದ ಜನಪರ ಕಾಳಜಿಯ ಮಹಾರಾಜರು ನಾಲ್ವಡಿ ಕೃಷ್ಣರಾಜ ಒಡೆಯರ್. ಅವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಆಗಿರುವ ಜನಪರ ಕಾಳಜಿಯ ಪ್ರಗತಿ ರಾಜ್ಯದ ಬದುಕನ್ನೇ ಬದಲಾಯಿಸಿದ ಬೆಳವಣಿಗೆ ಎಂದರೆ ಅತಿಶಯೋಕ್ತಿಯಲ್ಲ. ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವುದರ ಮೂಲಕ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಿದರು. ಪ್ರಜಾಪ್ರತಿನಿಧಿ ಸಭೆಯನ್ನು ಸ್ಥಾಪಿಸುವುದರ ಮುಖೇನ ಆಡಳಿತದಲ್ಲಿ ಪ್ರಜಾಪ್ರಭುತ್ವದ ಆಶಯವನ್ನು ಅನುಷ್ಠಾನಗೊಳಿಸಿದರು. ಹಲವು ಕೈಗಾರಿಕೆಗಳನ್ನು ಸ್ಥಾಪಿಸಿ ಜನಸಾಮಾನ್ಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದರು ಎಂದು ಸಿದ್ದರಾಮಯ್ಯ ಹೇಳಿದರು.
ಪರಿಷತ್ತಿನ ಸ್ವಾಯತ್ತತೆಗೆ ಕಂಟಕ ಇಲ್ಲ
ಕರ್ನಾಟಕದಲ್ಲಿ ಯಾವುದೇ ಆಡಳಿತ ಬಂದರೂ ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆಗೆ ಎಂದೂ ಕಂಟಕ ಬಂದಿಲ್ಲ. ಮುಂದೆಯೂ ಬರುವುದಿಲ್ಲ ಎಂಬ ವಿಶ್ವಾಸ ನನ್ನಲ್ಲಿದೆ. ಅದು ಇಡೀ ಕನ್ನಡಿಗರ ಕನ್ನಡ ಬದುಕಿನ ಸಾಕ್ಷಿಪ್ರಜ್ಞೆಯ ಪ್ರತೀಕವೆಂಬುದನ್ನು ಪ್ರತಿಯೊಬ್ಬ ಕನ್ನಡಿಗನೂ ವಿನಯದಿಂದ ಗೌರವಿಸಬೇಕು. ಅದು ಹಾಗೆಯೇ ಪ್ರಜಾಸತ್ತಾತ್ಮಕ ದೃಷ್ಟಿಯಲ್ಲಿ ನಡೆದುಕೊಂಡು ಹೋಗಲು ಸಹಕರಿಸಬೇಕು. ಹಿಂದಿನ ಸರ್ಕಾರಗಳು ಈ ಕಾರ್ಯವನ್ನು ಅಲ್ಪ-ಸ್ವಲ್ಪ ಹೆಚ್ಚು-ಕಡಿಮೆ ಪ್ರಮಾಣದಲ್ಲಿ ಸರಿದೂಗಿಸಿಕೊಂಡು ಬಂದಿದ್ದಾರೆ. ಅನುದಾನ ಕೊಡುವುದರಲ್ಲಿ ಹೆಚ್ಚು ಕಡಿಮೆ ಆಗಿರಬಹುದು. ಆಡಳಿತದೊಳಗೆ ಮಾತ್ರ ಎಂದೂ ಮೂಗು ತೂರಿಸಿಲ್ಲ ಎಂಬುದು ಮುಖ್ಯ ವಿಚಾರ. ನಮ್ಮ ಸರ್ಕಾರವೂ ಈ ವಿಚಾರದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಪರಂಪರೆಯನ್ನು ಗೌರವಿಸಿ ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನವನ್ನು ನೀಡಿ ಸಹಕರಿಸುತ್ತಿದ್ದೇವೆ. ಸಾಂಸ್ಕೃತಿಕ ಲೋಕ ಆರೋಗ್ಯಕರವಾಗಿದ್ದರೆ ಪ್ರಜಾಸತ್ತೆ ಉಳಿಯುತ್ತದೆ ಬೆಳೆಯುತ್ತದೆ ಎಂಬುದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮತ್ತೊಂದು ವಿಶೇಷವೆಂದರೆ, ನಮ್ಮ ಸರ್ಕಾರದ ಭಾಗ್ಯವೆಂಬಂತೆ ಕನ್ನಡ ಸಾಹಿತ್ಯ ಪರಿಷತ್ತಿಗೆ ನೂರು ವರ್ಷ ತುಂಬುತ್ತಿದೆ. ಈ ನೂರು ವರ್ಷದ ಸಂಭ್ರಮಾಚರಣೆಯನ್ನು ಆಚರಿಸಲು ಬೇಕಾಗುವ ಎಲ್ಲಾ ಧನಸಹಾಯವನ್ನೂ ನಮ್ಮ ಸರ್ಕಾರ ಪರಿಷತ್ತಿಗೆ ನೀಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.