ಬೆಂಗಳೂರು : ಈ ವರ್ಷದ ಮೊದಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಇಂದು ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿರುವ ಜಂಟಿ ಸದನಗಳ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ.
ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳ ಸದ್ಯಗಳನ್ನುದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡಲಿರುವುದು ಈ ಬಾರಿಯ ವಿಶೇಷವಾಗಿದೆ. ಅತ್ತ ಶ್ರವಣಬೆಳಗೊಳದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಸಂದರ್ಭದಲ್ಲಿಯೇ ಇತ್ತ ವಿಧಾನಸೌಧದಲ್ಲಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿರುವದು ಸಹಜವಾಗಿಯೇ ಕನ್ನಡ ಮನಸ್ಸುಗಳ ಕಣ್ಣು ಕೆಂಪಾಗಿಸಿದೆ.
ಇನ್ನು ಈ ಬಾರಿಯ ಅಧಿವೇಶನದಲ್ಲಿ ಅರ್ಕಾವತಿ ಡಿ ನೋಟಿಫಿಕೇಶನ್ ವಿಚಾರ ಸೇರಿದಂತೆ ಇನ್ನೂ ಕೆಲವು ಪ್ರಸಕ್ತ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಹಾಗೂ ಸರ್ಕಾರದ ನಡುವೆ ಚರ್ಚೆ, ವಾಗ್ಯುದ್ಧ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ.
ಸದನದ ಕಲಾಪಗಳು ಯಾವುದೇ ಕಾರಣಕ್ಕೂ ಹೈಜಾಕ್ ಆಗಲು ಬಿಡುವುದಿಲ್ಲ ಎಂದು ವಿಧಾನಸಭಾದ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಈಗಾಗಲೇ ತಿಳಿಸಿರುವುದು ಎಲ್ಲಾ ಪಕ್ಷಗಳ ಶಾಸಕರಿಗೂ ಎಚ್ಚರಿಕೆ ನೀಡಿದಂತಾಗಿದೆ. ಸದನದಲ್ಲಿ ನಿಯಮ ಮೀರಿ ವರ್ತಿಸುವ ಸದಸ್ಯರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕಾಗೋಡು ತಿಮ್ಮಪ್ಪ ಎಚ್ಚರಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಾರಿ ಕರ್ನಾಟಕ ಶಿಕ್ಷಣ (ತಿದ್ದುಪಡಿ) ವಿಧೇಯಕ ಮಂಡನೆಯಾಗಲಿದೆ. ಅದೇ ರೀತಿ ಕರ್ನಾಟಕ ಕಾಕಂಬಿ ನಿಯಂತ್ರಣ ವಿಧೇಯಕ, ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ವಿಧೇಯಕ ಹಾಗೂ ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕಗಳ ಕುರಿತು ಚರ್ಚೆ ನಡೆಯಲಿದೆ
ಒಟ್ಟು 9 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಡೆಯಲಿದ್ದು, ಇದುವರೆಗೆ 2256 ಪ್ರಶ್ನೆಗಳು ಸ್ವೀಕೃತವಾಗಿ 2181 ಪ್ರಶ್ನೆಗಳನ್ನು ಅಂಗೀಕರಿಸಲಾಗಿದೆ. ಇವುಗಳಲ್ಲಿ 75 ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು 2106 ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಎಂದು ವಿಂಗಡಿಸಲಾಗಿದೆ. ಇದರ ಜತೆಗೆ 29 ಗಮನ ಸೆಳೆಯುವ ಸೂಚನೆಗಳು, ನಿಯಮ 351ರಡಿ 22 ಸೂಚನೆಗಳನ್ನು ಸ್ವೀಕರಿಸಲಾಗಿದೆ. ಶಾಸಕ ಕೆ. ಗೋಪಾಲಯ್ಯ ಅವರು "ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ ಪಕ್ಷ 3 ವರ್ಷಕ್ಕೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ನೀಡಲು ಸಂವಿಧಾನದ ಅನುಚ್ಛೇದ 171(3)(ಸಿ)ಗೆ ಸೂಕ್ತ ತಿದ್ದುಪಡಿ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ' ಖಾಸಗಿ ನಿರ್ಣಯ ಮಂಡಿಸಲು ಅನುಮತಿ ಪಡೆಯಲಾಗಿದೆ.