ನವದೆಹಲಿ : ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ವಿಫಲರಾದ ಭಯೋತ್ಪಾದಕರು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ಹಾಗೂ ಸಂಸತ್ ಭವನದ ಮೇಲೆ ಆತ್ಮಾಹುತಿ ಬಾಂಬ್ ದಾಳಿಗೆ ಸಜ್ಜಾಗಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಈಗಾಗಲೇ ಕೆಲವು "ಫಿದಾಯೀನ್' (ಆತ್ಮಾಹುತಿ ದಾಳಿಕೋರರು) ದೆಹಲಿ ಪ್ರವೇಶಿಸಿದ್ದು, ಅತ್ಯಂತ ಯೋಜಿತ ರೀತಿಯಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಹವಣಿಸುತ್ತಿದ್ದಾರೆ. ರೇಸ್ಕೋರ್ಸ್ ರಸೆಯಲ್ಲಿರುವ ಪ್ರಧಾನಿ ನಿವಾಸ, ಸಂಸತ್ ಭವನ ಅವರ ಗುರಿಗಳಾಗಿವೆ ಎಂದು ಗುಪ್ತಚರ ದಳದ ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಹಾಗೂ ಕೇಂದ್ರೀಯ ಅರೆಸೇನಾ ಪಡೆಗಳನ್ನು ಕಟ್ಟೆಚ್ಚರ ಸ್ಥಿತಿಯಲ್ಲಿಡಲಾಗಿದೆ. ರಾಷ್ಟ್ರ ರಾಜಧಾನಿಯ ಸೂಕ್ಷ್ಮ ವಲಯಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ಭಾರಿ ಸಂಖ್ಯೆಯ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.