ಬೆಂಗಳೂರು : 'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ.
ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್ ತೊಗಾಡಿಯಾಗೆ ಬೆಂಗಳೂರು ಪ್ರವೇಶಿಸದಂತೆ ನಿಷೇಧ ಹೇರಿರುವ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಭಯೋತ್ಪಾದನೆ ತಡೆಯಲು ಸಾಧ್ಯವಿಲ್ಲದವರು ತೊಗಾಡಿಯಾ ಅವರಿಗೇಕೆ ನಿರ್ಬಂಧ ವಿಧಿಸಬೇಕು ಎಂದರು. ಕಾಂಗ್ರೆಸ್ ಸರ್ಕಾರ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರುವ ಮೂಲಕ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತಿದೆ. ಕಾಂಗ್ರೆಸ್ ನ ಈ ಕ್ರಮಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಶಾಸ್ತಿಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಶೋಕ್ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋಮುಗಲಭೆ ಶಾಂತಿ ಕದಡುವವರಿಗೆ ರಾಜ್ಯವನ್ನು ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಇಲ್ಲಿ ಜಾತಿ ಧರ್ಮಗಳ ಪ್ರಶ್ನೆ ಉದ್ಭವಿಸುವುದಿಲ್ಲ, ಯಾರೇ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡಿದರೂ ಅವರಿಗೆ ನಿಷೇಧ ಹೇರಲಾಗುತ್ತದೆ. ಸರ್ಕಾರ ಅಲ್ಪಸಂಖ್ಯಾತರ ಪರವೂ ಇಲ್ಲ ಬಹುಸಂಖ್ಯಾತರ ಪರವೂ ಇಲ್ಲ ಎಂದು ಹೇಳಿದ್ದಾರೆ.
ಅಶೋಕ್ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಆರ್.ವಿ ದೇಶಪಾಂಡೆ, ಗೋವಾದಲ್ಲಿ ನಿಮ್ಮದೇ ಸರ್ಕಾರವಿದ್ದರೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ನಿಷೇಧ ಹೇರಿದ್ದು ಏಕೆ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಉತ್ತರದಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದಾಗಿ ವಿಧಾನಸಭಾ ಕಲಾಪದಲ್ಲಿ ಗದ್ದಲ ಉಂಟಾಗಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದ್ದರು.
ಇನ್ನು ವಿಧಾನಪರಿಷತ್ ನಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಉಗ್ರಪ್ಪ ಹಾಗೂ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ನಡುವೆ ವಾಗ್ವಾದ ನಡೆಯಿತು. ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸಗಳನ್ನು ಮಾಡುತ್ತಿರುವ ಪ್ರವೀಣ್ ತೊಗಾಡಿಯಾ ಅವರಿಗೆ ರಾಜ್ಯಕ್ಕೆ ಬರಲು ಅನುಮತಿ ನೀಡಬಾರದು. ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸಕ್ಕೆ ತೊಗಾಡಿಯಾಗೆ ಅವಕಾಶ ನೀಡಬಾರದು ಎಂದು ಹೇಳಿದರು. ಉಗ್ರಪ್ಪ ಹೇಳಿಕೆಗೆ ಕೆಂಡಾಮಂಡಲರಾದ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ನವರು ಜಾತಿಗಳ ಮಧ್ಯೆ ಬೆಂಕಿ ಹಚ್ಚುವ ಮೂಲಕ ಸಮಾಜದ ಶಾಂತಿಯನ್ನು ಕದಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರವೀಣ್ ತೊಗಾಡಿಯಾ ಅವರಿಗೆ ನಿಷೇಧ ಹೇರುವ ನಿರ್ಧಾರ ಗೃಹ ಇಲಾಖೆಯದ್ದು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಹಾಗಾದರೆ ರಾಜ್ಯದಲ್ಲಿ ಪೊಲೀಸ್ ಸರ್ಕಾರ ನಡೆಯುತ್ತಿದೆಯಾ? ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ. ಉಭಯ ನಾಯಕರ ನಡುವೆ ವಾಗ್ವಾದ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಈ ವಿಷಯದ ಬಗ್ಗೆ ಪ್ರಶ್ನೋತ್ತರ ಕಲಾಪದಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವುದಾಗಿ ವಿಧಾನಪರಿಷತ್ ಸಭಾಪತಿ ಡಿ.ಹೆಚ್ ಶಂಕರಮೂರ್ತಿ ಹೇಳಿದ್ದಾರೆ.