ಬಿಹಾರ : 'ಬಿಹಾರ'ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ.
ಬಿಹಾರದಲ್ಲಿ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಆರ್.ಜೆ.ಡಿ ಪಕ್ಷದ ಮುಖಂಡ ಲಾಲೂ ಪ್ರಸಾದ್ ಯಾದವ್ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅವರನ್ನು ಭೇಟಿ ಮಾಡಿರುವ ಆರ್.ಜೆ.ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಮುಖ್ಯಮಂತ್ರಿ ಸ್ಥಾನದಿಂದ ಜಿತನ್ ರಾಮ್ ಮಾಂಝಿ ಅವರನ್ನು ಕೆಳಗಿಳಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಮಾಂಝಿ ಅವರ ಬದಲು ನಿತೀಶ್ ಕುಮಾರ್ ಅವರನ್ನೇ ಮತ್ತೆ ಮುಖ್ಯಮಂತ್ರಿ ಮಾಡಬೇಕೆಂಬುದು ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಹಲವರ ಅಭಿಪ್ರಾಯವಾಗಿದೆ.
ಮುಂದಿನ ಚುನಾವಣೆಯಲ್ಲಿ ಆರ್.ಜೆ.ಡಿ ಹಾಗೂ ಜೆಡಿಯು ಒಟ್ಟಿಗೆ ಚುನಾವಣೆ ಎದುರಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯಲ್ಲಿ ಲಾಲೂ ಪ್ರಸಾದ್ ಅಭಿಪ್ರಾಯ ಮುಖ್ಯವಾಗಿದೆ. ದೆಹಲಿ ಚುನಾವಣೆ ಫಲಿತಾಂಶದ ಬಳಿಕ ಬಿಹಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ.
ಮೋದಿ ಪ್ರಧಾನಿಯಾದ ಬೆನ್ನಲ್ಲೇ ಬಿಹಾರದಲ್ಲಿ ಪಕ್ಷದ ಸೋಲಿಗೆ ಹೊಣೆಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದರು. ಇದೀಗ ದೆಹಲಿ ಚುನಾವಣೆಯಲ್ಲಿ ಚುನಾವಣಾ ಪೂರ್ವ ಸಮೀಕ್ಷೆಗಳಿಗೆ ಪೂರಕವಾಗಿ ಬಿಜೆಪಿಗೆ ಕಡಿಮೆ ಸ್ಥಾನ ಬಂದರೆ ದೇಶದಲ್ಲಿ ಮೋದಿ ಅಲೆ ಇಲ್ಲ ಎಂಬ ಕಾರಣ ನೀಡಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬಹುದು ಎಂಬುದು ನಿತೀಶ್ ಕುಮಾರ್ ಆಲೋಚನೆಯಾಗಿರುವ ಸಾಧ್ಯತೆ ಇದೆ.