ನವದೆಹಲಿ : 'ದೆಹಲಿ' ವಿಧಾನಸಭಾ ಚುನಾವಣೆ ಫಲಿತಾಂಶ ನರೇಂದ್ರ ಮೋದಿ ಅವರ ಬಗೆಗಿನ ಜನಾಭಿಪ್ರಾಯವಾಗುವುದಿಲ್ಲ ಎಂದು ಬಿಜೆಪಿ ಹೇಳಿದೆ.
ದೆಹಲಿಯಲ್ಲಿ ಚುನಾವಣೆ ನಡೆಯುತ್ತಿರುವುದು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಧಾನ ಮಂತ್ರಿ ಸ್ಥಾನಕ್ಕಾಗಿ ಅಲ್ಲ. ಆದ್ದರಿಂದ ಈ ಚುನಾವಣೆಯ ಫಲಿತಾಂಶವನ್ನು ನರೇಂದ್ರ ಮೋದಿ ಅವರ ಬಗೆಗಿನ ಜನಾಭಿಪ್ರಾಯವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.
ದೆಹಲಿಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವುದಕ್ಕೆ ಕೆಲವೇ ದಿನಗಳ ಮುನ್ನ ಪ್ರಕಟವಾಗಿದ್ದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗಿತ್ತು. ದೆಹಲಿ ಜನತೆ ಬಿಜೆಪಿಗಿಂತಲೂ ಆಮ್ ಆದ್ಮಿ ಪಕ್ಷಕ್ಕೇ ಹೆಚ್ಚು ಬೆಂಬಲ ನೀಡಲಿದ್ದಾರೆ. ಈ ಬಾರಿ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದ್ದು ದೆಹಲಿ ಚುನಾವಣಾ ಫಲಿತಾಂಶಕ್ಕೂ ಮೋದಿ ಇಮೇಜ್ ಗೂ ಸಂಬಂಧ ಕಲ್ಪಿಸಲು ಸಾಧ್ಯವಿಲ್ಲ ಎಂದಿದೆ.
ಫೆ.4ರಂದು ದೆಹಲಿಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಪೂರ್ವ ಸಮೀಕ್ಷೆಗಳು ಹಲವು ಬಾರಿ ಸುಳ್ಳಾಗಿರುವುದರಿಂದ ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ದೆಹಲಿ ಜನತೆಗೆ ಕರೆ ನೀಡಿದ್ದರು.