ಬೆಂಗಳೂರು : ನಮ್ಮ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಬಹುತೇಕ ಹಿಂದೂಗಳೇ ಸರ್ಕಾರದಲ್ಲಿದ್ದಾರೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ವಿಶ್ವಹಿಂದೂ ಪರಿಷತ್ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪ್ರವೀಣ್ ತೊಗಾಡಿಯಾಗೆ ನಿರ್ಬಂಧ ವಿಧಿಸಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೆ.ಜೆ. ಜಾರ್ಜ್, ಪ್ರವೀಣ್ ತೊಗಾಡಿಯಾ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ಕೆಲವೆಡೆ ಗಲಾಟೆಗಳಾದ ಉದಾಹರಣೆಗಳಿವೆ. ಅಲ್ಲದೇ ಗುಜರಾತ್, ಮಧ್ಯಪ್ರದೇಶ, ಪಶ್ಚಿಮ ಬಂಗಾಳದಲ್ಲಿ ತೊಗಾಡಿಯಾ ವಿರುದ್ಧ ಕೇಸ್ ದಾಖಲಾಗಿವೆ. ಇವನ್ನೆಲ್ಲಾ ನೋಡಿಕೊಂಡೂ ಪ್ರವೀಣ್ ತೊಗಾಡಿಯಾ ಬೆಂಗಳೂರಿಗೆ ಆಗಮಿಸುವುದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಹಿಂದೂ ಸಮಾಜೋತ್ಸವಕ್ಕೆ ಸರ್ಕಾರದಿಂದ ನಿರ್ಬಂಧವಿಲ್ಲ. ಆದರೆ ಬೆಂಗಳೂರಿನಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವ ಉದ್ದೇಶದಿಂದ ಪ್ರವೀಣ್ ತೊಗಾಡಿಯಾಗೆ ನಿರ್ಬಂಧ ವಿಧಿಸಲಾಗಿದೆ. ಪ್ರವೀಣ್ ತೊಗಾಡಿಯಾ ಬೆಂಗಳೂರಿಗೆ ಆಗಮಿಸಿದರೆ ಕೋಮು ಸಾಮರಸ್ಯ ಹದಗೆಡಲಿದೆ ಎಂಬ ಗುಪ್ತಚರ ಇಲಾಖೆ ಅಧಿಕಾರಿಗಳ ಶಿಫಾರಸ್ಸು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೆ.ಜೆ ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲೂ ಘರ್ ವಾಪಸಿ ಕಾರ್ಯಕ್ರಮಗಳು ನಡೆಸುವ ಬಗ್ಗೆ ಮಾಹಿತಿ ಇದೆ. ಕಾನೂನಿಗೆ ವಿರುದ್ಧವಾಗಿ ನಡೆಯುವ ಮತಾಂತರಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ. ಘರ್ ವಾಪಸಿ ಕಾರ್ಯಕ್ರಮ ನಡೆಯಲು ಸರ್ಕಾರ ಬಿಡುವುದಿಲ್ಲ ಎಂದು ಜಾರ್ಜ್ ತಿಳಿಸಿದ್ದಾರೆ.