ಪಾಟ್ನಾ : ಬಿಹಾರ ರಾಜಕೀಯ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ್ದಾರೆ.
ಬೆಳಿಗ್ಗೆಯಷ್ಟೇ ಸಿಎಂ ಮಾಂಝಿ, ಮಾಜಿ ಸಿಎಂ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಹಾರ ರಾಜಕೀಯ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸಿವೆ ಎಂದೇ ಹೇಳಲಾಗಿತ್ತು. ಆದರೆ ಮಧ್ಯಾಹ್ನ ದಿಢೀರನೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ನಿರ್ಧಾರ ಕೈಗೊಂಡರು.
29 ಸಚಿವರಲ್ಲಿ 21 ಸಚಿವರು ವಿಧಾನಸಭೆ ವಿಸರ್ಜನೆಗೆ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದ್ದಾರೆ. ಇದರ ಹೊರತಾಗಿಯೂ ವಿಧಾನಸಭೆ ವಿಸರ್ಜನೆ ಮಾಡುವಂತೆ ರಾಜ್ಯಪಾಲ ಕೆಸರಿನಾಥ್ ತ್ರಿಪಾಠಿ ಅವರಿಗೆ ಸಿಎಂ ಶಿಫಾರಸು ಮಾಡಿದ್ದಾರೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರು ತಮ್ಮ ಬೆಂಬಲಿಗ ಸಚಿವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಲು ತೆರಳಿದ್ದಾರೆ. ಈ ಮೂಲಕ ಮತ್ತೆ ಬಿಹಾರದ ಸಿಎಂ ಹುದ್ದೆಗೆ ಏರಬೇಕೆಂಬ ನಿತೀಶ್ ಕುಮಾರ್ ಕನಸು ಭಗ್ನವಾಗುವ ಸಾಧ್ಯತೆ ದಟ್ಟವಾಗಿದೆ.
ಒಟ್ಟಿನಲ್ಲಿ ಬಿಹಾರ ರಾಜಕೀಯ ಚಂಡು ಸಧ್ಯ ರಾಜ್ಯಪಾಲರ ಅಂಗಳದಲ್ಲಿದ್ದು, ಮಾಂಝಿಗೆ ಬಹುಮತ ಸಾಬೀತುಪಡಿಸಲು ಸೂಚಿಸಬಹುದು ಅಥವಾ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವ ಸಾಧ್ಯತೆಯಿದೆ.