ಬೆಂಗಳೂರು : ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಸಭೆ ನಡೆಸಲಾಯಿತು.
ಹೆಚ್1 ಎನ್1 ಮಹಾಮಾರಿ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಯಿತು . ಈಗಾಗಲೇ ಗದಗ, ಬಿಜಾಪುರ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ 10 ಜನ ಮೃತಪಟ್ಟಿದ್ದಾರೆ. 106 ಜನರಲ್ಲಿ ಈ ರೋಗ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ರೋಗ ನಿಯಂತ್ರಣದ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ಈ ರೋಗದಿಂದ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಾಗಿ ದೃಢಪಟ್ಟಿದ್ದು, ರೋಗ ನಿಯಂತ್ರಣಕ್ಕಾಗಿ ತುರ್ತು ಸಭೆ ನಡೆಸಿ ಆರೋಗ್ಯ ಇಲಾಖೆ ಸಮಾರೋಪಾದಿಯಲ್ಲಿ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಸೂಚಿಸಲಾಗಿದ್ದು,
ಎಲ್ಲಾ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಸಂಜೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಹೆಚ್1ಎನ್1 ಕಾಯಿಲೆಗೆ ಮಕ್ಕಳಿಗೆ ಸಿರಪ್ ಮತ್ತು ದೊಡ್ಡವರಿಗ ಮಾತ್ರೆ ಮಾತ್ರ ನೀಡಬಹುದಾಗಿದೆ. ಇವುಗಳ ಖರೀದಿಗೆ ಎಲ್ಲಾ ಜಿಲ್ಲೆಗಳಿಗೆ ತಕ್ಷಣವೇ ಒಂದು ಲಕ್ಷ ರೂ.ಗಳ ಅನುದಾನ ನೀಡುವಂತೆ ಸೂಚಿಸಲಾಗಿದೆ ಎಂದು ಖಾದರ್ ತಿಳಿಸಿದರು.
ರಾಜ್ಯದಲ್ಲಿ ಎಚ್1ಎನ್1 ಪರೀಕ್ಷೆಗೆ ಸಂಬಂಧಿಸಿದಂತೆ ಐದು ಪ್ರಯೋಗಾಲಯಗಳು ಮಾತ್ರ ಇವೆ. ರೋಗ ವ್ಯಾಪಕವಾಗಿ ಉಲ್ಬಣಿಸಿದರೆ ಪ್ರಯೋಗಾಲಯಗಳ ಕೊರತೆ ಕಾಡುತ್ತದೆ. ಹಾಗಾಗಿ ಪ್ರಯೋಗಾಲಯಗಳನ್ನು ಹೆಚ್ಚಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನವನ್ನು 50 ಸಾವಿರ ಮತ್ತು ಅದಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ನಗರಪ್ರದೇಶಗಳಲ್ಲಿ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಇದೇ ವೇಳೆ ಹೇಳಿದ್ದಾರೆ.