ಬೆಂಗಳೂರು : ಪ್ರತಿಪಕ್ಷಗಳ ಸಲಹೆಯನ್ನು ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆ.9ರಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಕುಮಾರಸ್ವಾಮಿ, ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಕಬ್ಬು ಬೆಳೆಗಾರರಿಗೆ 1270 ಕೋಟಿ ರೂಪಾಯಿ ಬಾಕಿ ಹಣ ನೀಡಬೇಕಿದೆ. ಆದರೆ ರಾಜ್ಯ ಸರ್ಕಾರ ಈ ವರೆಗೂ ಬಾಕಿ ಹಣ ಪಾವತಿಸಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಭತ್ತಕ್ಕೆ ಪ್ರತಿ ಕ್ವಿಂಟ್ವಾಲ್ ಗೆ 1050 ರೂಪಾಯಿ ಸಿಗುತ್ತಿಲ್ಲ. ಇನ್ನು ಬೆಳೆ ವಿಮೆ ಸಹ ರೈತರಿಗೆ ಸರಿಯಾಗಿ ತಲುಪುತ್ತಿಲ್ಲ, ರೈತರಿಗೆ ಸರ್ಕಾರದಿಂದ ಸಿಗುವ ಹಣವೂ ಸಿಗುತ್ತಿಲ್ಲ. ಅತಿವೃಷ್ಟಿ, ಅನಾವೃಷ್ಟಿ ಉಂಟಾದ ಸಂದರ್ಭದಲ್ಲಿ ಸಿಗುವ ವಿಮೆ ಹಣ, ಬೆಳೆಹಾನಿ ಪರಿಹಾರವೂ ಸಮರ್ಪಕವಾಗಿ ದೊರೆಯುತ್ತಿಲ್ಲ, ಹೀಗಾಗಿ ರಾಜ್ಯದಲ್ಲಿ ರೈತರ ಆತ್ಮಹೆತ್ಯೆ ಹೆಚ್ಚಾಗುತ್ತಿದೆ ಎಂದು ಹೆಚ್.ಡಿ.ಕೆ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಸಮಸ್ಯೆಗಳ ಬಗ್ಗೆ ಪತ್ರ ಬರೆದು ಸರ್ಕಾರದ ಗಮನ ಸೆಳೆದರೆ ಮುಖ್ಯಮಂತ್ರಿಗಳು, ಪ್ರತಿಪಕ್ಷದವರು ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ವಿರೋಧ ಪಕ್ಷಗಳ ಸಲಹೆಯನ್ನು ಸರ್ಕಾರ ಲಘುವಾಗಿ ಪರಿಗಣಿಸುತ್ತಿದೆ. ವಿಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಾಕಾರಣ ಟೀಕಾಪ್ರಹಾರ ನಡೆಸುತ್ತಾರೆ ಎಂದು ಆರೋಪಿಸಿದ್ದಾರೆ.