ನವದೆಹಲಿ : 'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣಾನಗರ ಕ್ಷೇತ್ರದಿಂದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಿರಣ್ ಬೇಡಿ ಅವರು ಹೀನಾಯ ಸೋಲನುಭವಿಸಿದ್ದಾರೆ.
ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಎಸ್.ಕೆ ಬಗ್ಗಾ ಅವರ ವಿರುದ್ಧ ಕಿರಣ್ ಬೇಡಿ 1,150 ಮತಗಳ ಅಂತರದಿಂದ ಹೀನಾಯ ಸೋಲನುಭವಿಸಿದ್ದಾರೆ. ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಸೆಡ್ಡೊಡೆಯಲು ಕಿರಣ್ ಬೇಡಿ ಅವರನ್ನು ಬಿಜೆಪಿಗೆ ಚುನಾವಣ ಕಣಕ್ಕೆ ಇಳಿಸಿತ್ತು. ಆದರೆ ಬಿಜೆಪಿ ನಿರೀಕ್ಷೆಗಳು ಸುಳ್ಳಾಗಿದ್ದು, ಸ್ವತಃ ಕಿರಣ್ ಬೇಡಿ ಅವರೇ ಸೋಲನ್ನು ಅನುಭವಿಸಿದ್ದಾರೆ.
ಇನ್ನು ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್, ಬಿಜೆಪಿ ಅಭ್ಯರ್ಥಿ ನೂಪುರ್ ಶರ್ಮಾ ವಿರುದ್ಧ 26 ಸಾವಿರಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಕಿರಣ್ ವಾಲಿಯಾ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಹಾಗೂ ಆಪ್ ಪಕ್ಷಕ್ಕೆ ಐತಿಹಾಸಿಕ ಗೆಲುವು ದೊರೆತಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.