ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಅದ್ಮಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.
ನವದೆಹಲಿ 7 ರೇಸ್ ಕೋರ್ಸ್ ರಸ್ತೆಯಲ್ಲಿನ, ಪ್ರಧಾನಮಂತ್ರಿ ಅವರ ಅಧಿಕೃತ ನಿವಾಸದಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಚುನಾವಣೆಯ ಗೆಲುವಿನ ನಂತರ ಇದು ಪ್ರಧಾನಿಯವರ ಜೊತೆಗಿನ ಮೊದಲ ಸೌಹಾರ್ದಯುತ ಭೇಟಿಯಾಗಿದೆ.
ಈ ವೇಳೆ ದೆಹಲಿಯ ಉಪಮುಖ್ಯಮಂತ್ರಿ ನಾಮಾಂಕಿತ ಮನೀಶ್ ಸಿಸೋಡಿಯಾ ಅರವಿಂದ್ ಕೇಜ್ರಿವಾಲ್ ಅವರ ಜೊತೆಗಿದ್ದರು ಎಂದು ತಿಳಿದುಬಂದಿದೆ.
ಫೆ.14ರಂದು ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದು, ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ಅವರಿಗೆ ಆಹ್ವಾನ ನೀಡಿದ್ದಾರೆ. ಆದರೆ ಹಿಂದಿನ ನಿಗದಿತ ಕಾರ್ಯಕ್ರಮಗಳು ಮತ್ತು ಭದ್ರತೆಯ ಸಲುವಾಗಿ ಪ್ರಧಾನಿ ಅವರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ.
ಭೇಟಿಯ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, ಪ್ರಧಾನಿ ಅವರು ಫೆಬ್ರವರಿ 14 ರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರುತ್ತಿಲ್ಲ ಎಂದು ತಿಳಿಸಿದ್ದಾರೆ. ನಾವು ದೆಹಲಿಗೆ ರಾಜ್ಯ ಸ್ಥಾನಮಾನ ನಿಡುವ ಬೇಡಿಕೆಯನ್ನು ಇಟ್ಟಿದ್ದೇವೆ. ಇದರ ಬಗ್ಗೆ ಚಿಂತಿಸುವುದಾಗಿ ಮೋದಿ ತಿಳಿಸಿದ್ದಾರೆ ಎಂದು ಹೇಳಿದರು.