ನವದೆಹಲಿ : ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಪ್ರತಿಕ್ರಿಯಿಸಿದ್ದು ದಲಿತರನ್ನು ಮುಖ್ಯಮಂತ್ರಿ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
ಫೆ.16ರಂದು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಆದರೆ ಸಿ.ಎಂ ಸಿದ್ದರಾಮಯ್ಯ ಅವರು ದಲಿತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಆದ್ದರಿಂದ ದಲಿತರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವ ಪ್ರಸ್ತಾವನೆ ಹೈಕಮಾಂಡ್ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಕೂಗು ವ್ಯಾಪಕವಾಗಿ ವ್ಯಕ್ತವಾಗಿದೆ. ಈ ವಿಚಾರವಾಗಿ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸ್ಪಷ್ಟನೆ ನೀಡಿದ್ದಾರೆ. ಇದೀಗ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಸಹ ಸ್ಪಷ್ಟನೆ ನೀಡಿದ್ದು, ದಲಿತ ಮುಖ್ಯಮಂತ್ರಿ ನೇಮಕದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.