ಬೆಂಗಳೂರು : ಪ್ರವಾಸೋದ್ಯಮ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಕೋರ್ಟ್ ತೀರ್ಪಿನಿಂದ ಸಿ.ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ.
ಉನ್ನತ ಶಿಕ್ಷಣ ಸಚಿವರೂ ಆಗಿರುವ ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್ ಯೋಜನೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಕೋರ್ಟ್ ಫೆ.18ರಂದು ಆದೇಶಿಸಿದೆ.
2001ರಲ್ಲಿ ಕೈಗಾರಿಕೆ ಸಚಿವರಾಗಿದ್ದ ದೇಶಪಾಂಡೆ ಅವರು ಐಟಿ ಕಾರಿಡಾರ್ ಯೋಜನೆಯಲ್ಲಿ ಅಕ್ರಮ ನಡೆಸಿದ್ದಾರೆ ಎಂದು ವಾಸುದೇವ ರೆಡ್ಡಿ ಎನ್ನುವವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ಈ ದೂರನ್ನು ಪರಿಗಣಿಸಿರುವ ನ್ಯಾಯಾಲಯ ಲೋಕಾಯುಕ್ತ ಡಿ.ವೈ.ಎಸ್.ಪಿಗೆ ತನಿಖೆ ನಡೆಸುವಂತೆ ಈಗಾಗಲೇ ಸೂಚನೆ ನೀಡಿದೆ.
ಕೈಗಾರಿಕಾ ಸಚಿವರಾಗಿದ್ದ ಆರ್.ವಿ ದೇಶಪಾಂಡೆ, ಐಟಿ ಕಾರಿಡಾರ್ ಯೋಜನೆಗಾಗಿ ಸ್ವಾಧೀನ ಪಡಿಸಿಕೊಳ್ಳಲಾಗಿದ್ದ ಸುಮಾರು 70 ಎಕರೆ ಜಮೀನನ್ನು ಅಕ್ರಮವಾಗಿ ಭೂಸ್ವಾಧೀನದಿಂದ ಕೈಬಿಟ್ಟಿದ್ದಾರೆ ಎಂದು ವಾಸುದೇವ ರೆಡ್ಡಿ ಆರೋಪಿಸಿದ್ದರು.