ಶ್ರೀನಗರ : ಜಮ್ಮ-ಕಾಶ್ಮೀರದಲ್ಲಿ ಸರ್ಕಾರ ರಚನೆ ಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಬಿಜೆಪಿ-ಪಿಡಿಪಿ ಮೈತ್ರಿಯ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಈ ಬಗ್ಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಗೆ ಆರ್.ಎಸ್.ಎಸ್ ಯಾವುದೇ ಅಡ್ಡಿ ವ್ಯಕ್ತಪಡಿಸದಿದ್ದರೆ ಈ ವಾರದ ಅಂತ್ಯದಲ್ಲಿ ಅಥವಾ ಮುಂದಿನ ವಾರದ ಆದಿಯಲ್ಲಿ ಸರ್ಕಾರ ರಚನೆ ಕುರಿತ ಘೋಷಣೆ ಹೊರಬೀಳಲಿದೆ ಎನ್ನಲಾಗಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ಪರಿಚ್ಛೇದವನ್ನು ಹಾಗೆಯೇ ಉಳಿಸಿಕೊಳ್ಳುವುದು ಹಾಗೂ ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ (ಎಎಫ್ಎಸ್ಪಿಎ)ಯನ್ನು ರದ್ದುಗೊಳಿಸುವ ವಿಚಾರದಲ್ಲಿ ಬಿಜೆಪಿ- ಪಿಡಿಪಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈ ಕುರಿತು ಬಿಜೆಪಿ ಲಿಖಿತ ಭರವಸೆ ನೀಡಬೇಕೆಂದು ಪಿಡಿಪಿ ಪಟ್ಟು ಹಿಡಿದಿತ್ತು. ಇದಕ್ಕೆ ಬಿಜೆಪಿ ಸಮ್ಮತಿ ಸೂಚಿಸಿದ ಹಿನ್ನಲೆಯಲ್ಲಿ ಆರ್.ಎಸ್.ಎಸ್ ಅಸಮಾಧಾನ ವ್ಯಕ್ತಪಡಿಸಿತ್ತು.
ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಪಿಡಿಪಿ ಮುಖ್ಯಸ್ಥರಾದ ಮುಫ್ತಿ ಮೊಹಮ್ಮದ್ ಸಯೀದ್ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಆಗಲಿದ್ದು, 6 ವರ್ಷ ಅವರೇ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಮೂಲಗಳು ಹೇಳಿವೆ.